ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಡಿಕಲ್ಲು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ವತಿಯಿಂದ ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವಂತೆ ವಿದ್ಯಾರ್ಥಿಗಳಿಂದ ಶನಿವಾರ ಜಾಥಾ ನಡೆಯಿತು.
ಜಾಥಾದಲ್ಲಿ ವಿದ್ಯಾರ್ಥಿಗಳು ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವಂತೆ ಘೋಷಣೆಗಳೊಂದಿಗೆ ಅರಿವು ಮೂಡಿಸಿದರು. ಮನೆ ಮನೆಗೆ ಭೇಟಿ ನೀಡಿದ ಶಿಕ್ಷಕರು ಶಾಲೆಗೆ ದಾಖಲಾಗದ 6 ರಿಂದ 14 ವರ್ಷದ ಒಳಗಿನ ಮಕ್ಕಳು, ದಾಖಲಾಗಿ ಶಾಲೆಬಿಟ್ಟ ಮತ್ತು ಸತತ 6 ತಿಂಗಳು ಶಾಲೆಗೆ ಗೈರು ಹಾಜರಾಗಿರುವ ಮಕ್ಕಳ ಸಮೀಕ್ಷೆ ಮಾಡಿದರು.
ಕಡ್ಡಾಯ ಶಿಕ್ಷಣ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗೆ ಉಳಿಯಬಾರದು. ಈ ಹಿನ್ನೆಲೆಯಲ್ಲಿ 18 ವರ್ಷ ಒಳಗಿನ ಎಲ್ಲರೂ ಶಿಕ್ಷಣ ಪಡೆದುಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಕೂಲಿ ಹಾಗೂ ಇತರ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗಳನ್ನು ಹೆಚ್ಚಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉಚಿತ ಬೈಸಿಕಲ್ ಹಾಗೂ ವಿದ್ಯಾರ್ಥಿ ವೇತನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳು ಸಾಕಾರಗೊಳ್ಳಲು ಗ್ರಾಮದ ಪ್ರತಿ ಮಕ್ಕಳು ಶಾಲೆಗೆ ದಾಖಲು ಪಡೆಯಬೇಕಾಗಿದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಅವರನ್ನು ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಪೋಷಕರದ್ದಾಗಿದೆ ಎಂದು ಶಿಕ್ಷಕರು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.