
ಮಿಟ್ಟೇಮರಿ(ಬಾಗೇಪಲ್ಲಿ): ತಾಲ್ಲೂಕಿನ ಜೂಲಪಾಳ್ಯ ಗ್ರಾಮದಲ್ಲಿ ಗೋವಿನ ಪೂಜೆ ಮಾಡುವ ಮೂಲಕ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಬುಧವಾರ ಪಶುವೈದ್ಯ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡಿದರು. ಇದೇ ವೇಳೆ ಆರೋಗ್ಯ ಸೇತು ವಾಹನಕ್ಕೂ ಚಾಲನೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಶು ವೈದ್ಯಕೀಯ ಇಲಾಖೆ, ಯುನೈಟೆಡ್ ವೇ, ಸೀಬರ್ಡ್ ಸಂಯುಕ್ತಾಶ್ರಯದಲ್ಲಿ ಜೂಲಪಾಳ್ಯ ಗ್ರಾಮದಲ್ಲಿ ಹೊಸದಾಗಿ ಪಶು ವೈದ್ಯಕೀಯ ಆಸ್ಪತ್ರೆ ನಿರ್ಮಿಸಲಾಗಿದೆ.
ಬಳಿಕ ಮಾತನಾಡಿದ ಅವರು, ತಾಲ್ಲೂಕಿನ ಕೆಲವು ಗ್ರಾಮಗಳ ಕುರಿ, ಹಸು, ಮೇಕೆಗಳು, ಸೀಮೆಹಸುಗಳಿಗೆ ಚಿಕಿತ್ಸೆ ಕಲ್ಪಿಸಲು ಪಶು ಆಸ್ಪತ್ರೆಗೆ ಸಾಗಿಸಲು ಪ್ರಯಾಸ ಪಡುವಂತಾಗಿತ್ತು. ರೈತರು 1962 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ, ಪಶು ವೈದ್ಯರು ಮತ್ತು ಸಿಬ್ಬಂದಿ ಗ್ರಾಮಗಳಿಗೆ ಬಂದು ಕುರಿ, ಮೇಕೆ, ಹಸು ಮತ್ತು ಎಮ್ಮೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಿದ್ದಾರೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮಸ್ಥರ ಒತ್ತಾಯದಂತೆ ಸಮುದಾಯ ಭವನ ನಿರ್ಮಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಾಗೇಪಲ್ಲಿ ಕ್ಷೇತ್ರದ ಕಾಮಗಾರಿಗಳಿಗೆ ಅನುದಾನ ನೀಡಿದ್ದಾರೆ ಎಂದರು.
ತಾಲ್ಲೂಕಿನ ಬೋಡಿಕದಿರೇಪಲ್ಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕಕ್ಕೂ ಚಾಲನೆ ನೀಡಲಾಯಿತು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಕೃಷ್ಣಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಜಿಲ್ಲಾ ಪಂಚಾಯಿತಿ ತಾಂತ್ರಿಕ ಇಲಾಖೆ ಎಇಇ ಮಹೇಶ್, ಕೆಡಿಪಿ ಸದಸ್ಯ ಪಿ.ಮಂಜುನಾಥರೆಡ್ಡಿ, ದರಖಾಸ್ತು ಸಮಿತಿ ಸದಸ್ಯ ಲಕ್ಷ್ಮಿನರಸಿಂಹಪ್ಪ, ಮಂಜುನಾಥ್, ಕೃಷ್ಣಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.