ಚಿಂತಾಮಣಿ: ಚಿಂತಾಮಣಿ-ಬೆಂಗಳೂರು ರಸ್ತೆಯ ತಳಗವಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ರಾತ್ರಿ ಬೈಕ್ಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಜೋಡಿ ಹೊಸಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ(62) ಮೃತ ಬೈಕ್ ಸವಾರ.
ಶ್ರೀರಾಮರೆಡ್ಡಿ ಬೈಕ್ನಲ್ಲಿ ಚಿಂತಾಮಣಿಯ ಮಾವಿನ ಮಂಡಿಗೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.
ನೆರೆಯ ಆಂಧ್ರಪ್ರದೇಶಕ್ಕೆ ಸೇರಿದ ಇನ್ನೋವಾ ಕಾರು ಬೆಂಗಳೂರು ಕಡೆಯಿಂದ ಚಿಂತಾಮಣಿ ಮೂಲಕ ಮದನಪಲ್ಲಿಗೆ ತೆರಳುತ್ತಿತ್ತು. ಕಾರು ಚಾಲಕನ ಅತಿಯಾದ ವೇಗ ಚಾಲನೆಯಿಂದ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಚಾಲಕ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೈವಾರ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.