ADVERTISEMENT

ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ: ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2023, 11:35 IST
Last Updated 29 ಆಗಸ್ಟ್ 2023, 11:35 IST
 ಡಾ.ಕೆ. ಸುಧಾಕರ್‌
ಡಾ.ಕೆ. ಸುಧಾಕರ್‌   

ಚಿಕ್ಕಬಳ್ಳಾಪುರ: ಬಿಜೆಪಿ ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆ ಮಾಡಿದರೂ ನಾವು ಹೆದರುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಆದರೆ ಈಗಿನ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಭ್ರಷ್ಟಾಚಾರ ಆರಂಭಿಸಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನಮ್ಮ ವಿರುದ್ಧ ಒಂದಲ್ಲ, ನಾಲ್ಕು ವಿಚಾರಣೆಗಳನ್ನು ಮಾಡಿದರೂ ಹೆದರಿಕೆ ಇಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವು ಯಾರೂ ತಪ್ಪು ಮಾಡಿಲ್ಲ ಎಂದು ವಿಶ್ವಾಸದಿಂದ ಹೇಳುತ್ತೇನೆ. ಕೋವಿಡ್‌ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಂಜಾನೆ ಐದೂವರೆಗೆ ಕರೆ ಮಾಡಿ ಸಭೆ ಕರೆಯುತ್ತಿದ್ದರು. ಆಗ ಕಾಂಗ್ರೆಸ್‌ ನಾಯಕರು ಹೆಲ್ಮೆಟ್‌, ಮಾಸ್ಕ್‌ ಧರಿಸಿಕೊಂಡು, ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಿಕೊಂಡು ಕುಳಿತಿದ್ದರು. ಆದರೆ ನಾವೆಲ್ಲರೂ ಆಸ್ಪತ್ರೆ, ರೋಗಿಗಳ ಬಳಿ ತೆರಳಿ ಪರಿಶೀಲನೆ ನಡೆಸಿ ರಾಜ್ಯದ ಜನರ ರಕ್ಷಣೆ ಮಾಡಿದ್ದೇವೆ ಎಂದರು.

ADVERTISEMENT

ಕೆಲಸವಿಲ್ಲದ ಕಾಂಗ್ರೆಸ್‌ ನಾಯಕರು ವಿಚಾರಣೆಗಾಗಿ ಸಮಿತಿ ರಚಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ, 2013 ರಿಂದ ಈವರೆಗೆ ತನಿಖೆ ಮಾಡಲಿ. ಆಗ ಕಾಂಗ್ರೆಸ್‌ನವರು ಕೂಡ ನ್ಯಾಯಬದ್ಧವಾಗಿ ಇದ್ದಾರೆ ಎಂದು ಜನರು ಒಪ್ಪಿಕೊಳ್ಳುತ್ತಾರೆ. 2013 ರ ಅವಧಿಯಲ್ಲಿ ಕಾಂಗ್ರೆಸ್‌ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಅದನ್ನು ತನಿಖೆ ಮಾಡಿಸಲು ಎದೆಗಾರಿಕೆ ಇಲ್ಲ. ಸರ್ಕಾರ ಎಷ್ಟೇ ವಿಚಾರಣಾ ಸಮಿತಿ ರಚಿಸಿದರೂ, ಅದನ್ನು ಎದುರಿಸುವ ತಾಕತ್ತು ಹಾಗೂ ಮನೋಸ್ಥೈರ್ಯ ನಮಗೆ ಇದೆ. ಕಳ್ಳರೇ ಸಾಚಾಗಳಂತೆ ಓಡಾಡುತ್ತಿರುವಾಗ, ಸಾಚಾಗಳಾದ ನಾವೇಕೆ ಹೆದರಬೇಕು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.