ADVERTISEMENT

ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 10:06 IST
Last Updated 8 ಫೆಬ್ರುವರಿ 2020, 10:06 IST
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು   

ಚಿಕ್ಕಬಳ್ಳಾಪುರ: ಆರೋಗ್ಯವಂತ ಯುವ ಸಮುದಾಯ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವವನ್ನು ಉಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠದಾನ. ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಜೊತೆಗೆ ವ್ಯಕ್ತಿಯು ಆರೋಗ್ಯವಂತ ಜೀವನ ನಡೆಸಬಹುದು. ವಿದ್ಯಾವಂತರು ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅನಿಲ್‍ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜೀವನವನ್ನು ಸಾರ್ಥಕತೆ ಪಡೆದುಕೊಳ್ಳಬೇಕು. ರಕ್ತದಾನ ಮಾಡುವುದರಿಂದ ಆರೋಗ್ಯ ಇನ್ನಷ್ಟು ವೃದ್ಧಿಯಾಗಲಿದೆ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಓದಿನ ಜೊತೆಗೆ ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನವಿಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಯಾವುದೇ ಕಾಯಿಲೆ ಬಂದಲ್ಲಿ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಬಿರದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ.ನಾಗರಾಜಯ್ಯ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್‍ಕುಮಾರ್, ರೆಡ್‍ಕ್ರಾಸ್ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.