ADVERTISEMENT

ಮಾದಕವಸ್ತು ಮುಕ್ತ ಸಮಾಜ ನಿರ್ಮಿಸಿ

ಬೆಂಗಳೂರು ವೃತ್ತದಲ್ಲಿ ಮಾನವ ಸರಪಳಿ; ಜಾಗೃತಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:24 IST
Last Updated 16 ಸೆಪ್ಟೆಂಬರ್ 2020, 5:24 IST
ಚಿಂತಾಮಣಿಯಲ್ಲಿ ಪೊಲೀಸ್ ಇಲಾಖೆ ಮಂಗಳವಾರ ಮಾದಕ ವಸ್ತುಗಳ ವಿರುದ್ಧದ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ತಹಶೀಲ್ದಾರ್ ಹನುಮಂತರಾಯಪ್ಪ, ಡಿವೈಎಸ್ಪಿ ಲಕ್ಷ್ಮಯ್ಯ ಭಾಗವಹಿಸಿದ್ದರು.
ಚಿಂತಾಮಣಿಯಲ್ಲಿ ಪೊಲೀಸ್ ಇಲಾಖೆ ಮಂಗಳವಾರ ಮಾದಕ ವಸ್ತುಗಳ ವಿರುದ್ಧದ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ತಹಶೀಲ್ದಾರ್ ಹನುಮಂತರಾಯಪ್ಪ, ಡಿವೈಎಸ್ಪಿ ಲಕ್ಷ್ಮಯ್ಯ ಭಾಗವಹಿಸಿದ್ದರು.   

ಚಿಂತಾಮಣಿ: ಮಾದಕ ವಸ್ತುಗಳಿಂದ ಆಗುವದುಷ್ಪರಿಣಾಮ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟದ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಒಂದು ವಾರ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಲಕ್ಷ್ಮಯ್ಯ ತಿಳಿಸಿದರು.

ಪೊಲೀಸ್ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಮಾದಕ ವಸ್ತು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲೆಯಾದ್ಯಂತ ಅಭಿಯಾನವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳು, ಯುವಜನರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಮಾತ್ರ ಮಾದಕವಸ್ತುಗಳ ಕಳ್ಳ ಸಾಗಾಣಿಕೆ, ಮಾರಾಟ ತಡೆಗಟ್ಟಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಮಾದಕವಸ್ತುಗಳ ಜಾಲವನ್ನು ಮಟ್ಟಹಾಕಬಹುದು ಎಂದರು.

ADVERTISEMENT

ನಗರ ಠಾಣೆಯ ಇನ್‌ಸ್ಪೆಕ್ಟರ್ ಜೆ.ಆನಂದಕುಮಾರ್ ಮಾತನಾಡಿ, ಮಾದಕವಸ್ತುಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು, ವಂಚಕರ ಜಾಲದ ಬಗ್ಗೆ ಎಚ್ಚರಿಕೆ ವಹಿಸುವುದು ಜಾಥಾದ ಉದ್ದೇಶ. ಸಾರ್ವಜನಿಕರ ಸಹಭಾಗಿತ್ವವನ್ನು ಪಡೆದುಕೊಂಡಾಗ ಮಾತ್ರ ಇಲಾಖೆಯ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು.

ತಹಶೀಲ್ದಾರ್ ಹನುಮಂತರಾಯಪ್ಪ ಮಾತನಾಡಿ, ಇಂದಿನ ಸಮಾಜದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆ ಅತ್ಯಂತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅನೇಕ ಪ್ರಕರಣಗಳಲ್ಲಿ ಉತ್ತಮ ವ್ಯಕ್ತಿತ್ವ ಉಳ್ಳವರು ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ನಂತರ ಅದರಿಂದ ಹೊರಬರಲಾಗದೆ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ ಎಂದರು.

ನಗರದ ಪ್ರವಾಸಿ ಮಂದಿರದಿಂದ ಹೊರಟ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಬೆಂಗಳೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು.

ಪೌರಾಯುಕ್ತ ಉಮಾಶಂಕರ್, ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸಪ್ಪ, ನಾರಾಯಣಸ್ವಾಮಿ, ಸತೀಶ್, ನರೇಶನಾಯಕ್, ಪಾಪಣ್ಣ, ರಂಜನ್ ಕುಮಾರ್, ಪದ್ಮನಾಭರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.