ADVERTISEMENT

ಸಂಪುಟ ವಿಸ್ತರಣೆ ಶೀಘ್ರ: ಎಂಟಿಬಿ ಸುಳಿವು

ಮುಖ್ಯಮಂತ್ರಿ ಬದಲಾವಣೆ ಇಲ್ಲ: ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ

​ಪ್ರಜಾವಾಣಿ ವಾರ್ತೆ
Published 8 ಮೇ 2022, 3:10 IST
Last Updated 8 ಮೇ 2022, 3:10 IST
   

ಚಿಂತಾಮಣಿ (ಚಿಕ್ಕಬಳ್ಳಾಪುರ): ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಪುನರ್‌ ರಚನೆ ಆಗಲಿದೆ’ ಎಂದು ಪೌರಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ನಗರಸಭೆಯಆಡಳಿತಾರೂಢ ಅಧ್ಯಕ್ಷೆ, ಉಪಾಧ್ಯಕ್ಷೆ ಮತ್ತು ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿ ಬದಲಾವಣೆ ಊಹಾಪೋಹಗಳಿಗೆ ಈಗಾಗಲೇ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಡ್ ಪರಿಶೀಲನೆ ನಡೆಸುತ್ತಿದೆ. ಪಕ್ಷದ ವರಿಷ್ಠರು ಚರ್ಚೆ ನಡೆಸಿ ಕೆಲವೇ ದಿನಗಳಲ್ಲಿ ಒಪ್ಪಿಗೆ ನೀಡಲಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ADVERTISEMENT

‘ಸಚಿವ ಸಂಪುಟ ಪುನರ್‌ ರಚನೆಯಲ್ಲಿ ಯಾರು ಹೊರಹೋಗುತ್ತಾರೆ, ಯಾರು ಒಳಗೆ ಬರುತ್ತಾರೆ ಎಂಬ ವಿಷಯ ದೆಹಲಿ ವರಿಷ್ಠರಿಂದ ಪಟ್ಟಿ ಬಂದ ನಂತರ ಗೊತ್ತಾಗುತ್ತದೆ. ನನಗೆ ಇರುವ ಖಾತೆ ಕೊಟ್ಟರೂ ಸರಿ ಅಥವಾ ಬದಲಾವಣೆ ಮಾಡಿ ಇನ್ನೂ ಹೆಚ್ಚಿನ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ’ ಎಂದರು.

ಬೊಮ್ಮಾಯಿ ನೇತೃತ್ವ

2023ರ ವಿಧಾನಸಭಾ ಚುನಾವಣೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ. ಎಲ್ಲ ನಾಯಕರು ಸಾಮೂಹಿಕವಾಗಿ ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಯತ್ನಾಳ್ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಅವರ ಹೇಳಿಕೆಗೆ ಯಾವುದೇ ಪುರಾವೆ ಇಲ್ಲ. ಮಾಹಿತಿ ಪಡೆದು ಉತ್ತರ ನೀಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.