ಗೌರಿಬಿದನೂರು: ಐತಿಹಾಸಿಕ ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂ.19ರಂದು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ತೀರ್ಮಾನಿಸಿದ ವೇಳೆಯೇ ನಂದಿಗಿರಿಧಾಮದಲ್ಲಿಯೂ ಸಚಿವ ಸಂಪುಟ ಸಭೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ನೀಡಿದ್ದೆ. ಗಿರಿಧಾಮಕ್ಕೆ ಮಹಾತ್ಮ ಗಾಂಧಿ ಅವರು ಎರಡು ಬಾರಿ ಭೇಟಿ ನೀಡಿದ್ದಾರೆ ಎಂದರು.
ಎರಡು ದಿನಗಳ ಹಿಂದೆ ಕರೆ ಮಾಡಿದ ಮುಖ್ಯಮಂತ್ರಿ ಅವರು ಜೂ.19ಕ್ಕೆ ನಂದಿಬೆಟ್ಟದಲ್ಲಿ ಸಚಿವ ಸಂಪುಟದ ಸಭೆ ನಡೆಸಬಹುದಾ ಎಂದು ಕೇಳಿದರು. ನಾವು ಸಹ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಆ ಸಮಯದಲ್ಲಿ ಯಾವುದೇ ಕಾರ್ಯಕ್ರಮಗಳು ಇಲ್ಲದಿದ್ದರೆ 19ರಂದೇ ಸಭೆ ನಡೆಯಲಿದೆ ಎಂದು ತಿಳಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುವ ದೃಷ್ಟಿಯಿಂದ ಈ ಸಭೆ ಮಹತ್ವದ್ದಾಗಿದೆ. ಈ ಜಿಲ್ಲೆಗಳಿಗೆ ಅಗತ್ಯವಾದ ಅನುದಾನ, ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಬೇಡಿಕೆಗಳು ಸಹ ಹೆಚ್ಚಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.