
ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗ್ರಾಮದ ಭೋಗ ನಂದೀಶ್ವರ ದೇಗುಲದ ಆವರಣದಲ್ಲಿ ಸೋಮವಾರ ಭೋಗ ನಂದೀಶ್ವರ ಮತ್ತು ಯೋಗ ನಂದೀಶ್ವರ ಜೋಡಿ ರಥೋತ್ಸವದ ಶ್ರದ್ಧೆ, ಭಕ್ತಿ ಮತ್ತು ಅದ್ಧೂರಿಯಿಂದ ನೆರವೇರಿತು. ಸಹಸ್ರಾರು ಭಕ್ತರ ಉಪಸ್ಥಿತಿ ಮತ್ತು ಜಯಘೋಷಗಳಲ್ಲಿ ರಥೋತ್ಸವ ಜರುಗಿತು. ಮಧ್ಯಾಹ್ನ ಸುಡುಬಿಸಿಲಿನಲ್ಲಿಯೂ ಅಸಂಖ್ಯಾತ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಹಾಜರಿದ್ದರು. ರಥಗಳಲ್ಲಿ ಯೋಗ ನಂದೀಶ್ವರ, ಭೋಗನಂದೀಶ್ವರಸ್ವಾಮಿ, ಗಿರಿಜಾಂಬ, ಅಂಬಿಕಾ ಮತ್ತು ಗಣಪತಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.
ದೇವಾಲಯದ ಆವರಣದಿಂದ ರಥವು ಮುಂದಡಿ ಇಡುತ್ತಿದ್ದಂತೆ ಜಯಘೋಷಗಳು ಮೊಳಗಿದವು. ಕೇಸರಿ ಧ್ವಜ, ಹೂವುಗಳಿಂದ ಶೃಂಗಾರ ಗೊಂಡ ರಥಗಳನ್ನು ಭಕ್ತರು ದೇವಸ್ಥಾನದ ಸುತ್ತ ಎಳೆದರು. ಈ ವೇಳೆ ಭಕ್ತರು ರಥಗಳಿಗೆ ಬಾಳೆ ಹಣ್ಣು, ದವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವ ಆರಂಭಕ್ಕೂ ಮುನ್ನವೇ ದೇಗುಲದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಕೆಲವರು ನಿಂತಿದ್ದ ರಥಗಳಿಗೆ ಬಾಳೆಹಣ್ಣು ಎಸೆದು ತಮ್ಮ ಊರಿನ ಹಾದಿ ಹಿಡಿಯುತ್ತಿದ್ದರು.
ಶಿವರಾತ್ರಿ ಉಪವಾಸ ನಿರತ ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭೇಟಿ ದರ್ಶನ ಪಡೆಯುತ್ತಿದ್ದರು. ಶಿವರಾತ್ರಿಯ ಜಾಗರಣೆಯಲ್ಲಿ ಜಿಲ್ಲೆ, ಹೊರ ಜಿಲ್ಲೆಗಳು ಹಾಗೂ ನೆರೆಯ ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಭಕ್ತರು ಪಾಲ್ಗೊಳ್ಳುವರು. ರಾತ್ರಿ ಜಾಗರಣೆ ಪೂರ್ಣಗೊಳಿಸಿ ಬೆಳಿಗ್ಗೆ ರಥೋತ್ಸವದ ಮುಗಿಸಿ ತಮ್ಮ ಊರಿನ ಹಾದಿ ಹಿಡಿಯುವರು. ಹೀಗೆ ನಂದಿ ಜಾತ್ರೆಗೆ ಭಕ್ತರ ದಂಡೇ ಹರಿದು ಬಂದಿತ್ತು. ಹರಕೆ ಹೊತ್ತ ಭಕ್ತರು ದೇವರಿಗೆ ಮುಡಿ ಕೊಟ್ಟರು.
ದೇಗುಲದ ಸುತ್ತಲು ತಲೆ ಎತ್ತಿದ್ದ ಪೂಜಾ ಸಾಮಗ್ರಿ, ತಿಂಡಿ ತಿನಿಸು, ಆಟಿಕೆ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಆಲಂಕಾರಿಕ ವಸ್ತುಗಳು, ಹಣ್ಣು, ತಂಪುಪಾನಿಯ ಸೇರಿದಂತೆ ವಿವಿಧ ಬಗೆಯ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿತ್ತು.
ಬುರಗು, ಬತಾಸು, ಸಿಹಿ ಮತ್ತು ಕುರುಕಲು ತಿಂಡಿ ತಿನಿಸುಗಳ ವ್ಯಾಪಾರ ಜೋರಾಗಿತ್ತು. ಬಿಸಿಲ ಧಗೆಯಿಂದ ಹೊಟ್ಟೆ ತಣ್ಣನೆ ಮಾಡಲು ಭಕ್ತರು ಐಸ್ಕ್ರಿಂ, ಜ್ಯೂಸ್, ಕಲ್ಲಂಗಡಿ ಹಣ್ಣು ಮತ್ತು ಕಬ್ಬಿನ ಹಾಲಿನ ಮೊರೆ ಹೋಗುತ್ತಿದ್ದರು.
ದಾರಿಯುದ್ದಕ್ಕೂ ಮಜ್ಜಿಗೆ ಪಾನಕ ರಥೋತ್ಸವದ ಅಂಗವಾಗಿ ಕೆಲವು ಭಕ್ತರು ಸ್ವಯಂ ಪ್ರೇರಿತರಾಗಿ ತಮ್ಮ ಮನೆಗಳ ಮುಂಭಾಗ ಹಣ್ಣು ನೀರು ಮತ್ತು ಉಪಾಹಾರದ ವ್ಯವಸ್ಥೆ ಮಾಡಿದ್ದರು. ಚಿಕ್ಕಬಳ್ಳಾಪುರದಿಂದ ನಂದಿ ಗ್ರಾಮಕ್ಕೆ ಸಾಗುವ ರಸ್ತೆಗಳ ಅಲ್ಲಲ್ಲಿ ವಿವಿಧ ಗ್ರಾಮಗಳ ಜನರು ಮಜ್ಜಿಗೆ ಪಾನಕ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.