ADVERTISEMENT

ಚಿಕ್ಕಬಳ್ಳಾಪುರ | ದ್ವಿತೀಯ ಪಿಯುಸಿ: 12,986 ವಿದ್ಯಾರ್ಥಿಗಳ ನೋಂದಣಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:06 IST
Last Updated 24 ಫೆಬ್ರುವರಿ 2026, 6:06 IST
ಪ್ರಭು
ಪ್ರಭು   

ಚಿಕ್ಕಬಳ್ಳಾಪುರ: ಪರೀಕ್ಷಾ ಪಾವಿತ್ರ್ಯ ಕಾಪಾಡಿಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಪ್ರಭು  ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ ಕುರಿತು ಸೋಮವಾರ ಪೂರ್ವ ಸಿದ್ದತಾ ಸಭೆ ನಡೆಸಿ ಮಾತನಾಡಿದರು. 

28 ರಿಂದ ಮಾ.17ರವರೆಗೆ  ನಡೆಯುವ ದ್ವಿತೀಯ ಪಿಯುಸಿ  ಪರೀಕ್ಷೆಗಾಗಿ ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 6  ಬಾಗೇಪಲ್ಲಿ 3, ಗೌರಿಬಿದನೂರು 5, ಶಿಡ್ಲಾಘಟ್ಟ 3,  ಗುಡಿಬಂಡೆ 1 ಹಾಗೂ  ಚಿಂತಾಮಣಿ  ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 12,986 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಆಗಿದ್ದಾರೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ ಮೂಲಕ ಎಲ್ಲ ಕಾಲೇಜುಗಳಿಗೆ ವಿತರಿಸಲಾಗಿದೆ ಎಂದು ಹೇಳಿದರು. 

ADVERTISEMENT

ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಸಂಪೂರ್ಣ ಜವಾಬ್ದಾರಿ ಹೊಂದಿದ್ದು ನಿಯಮಗಳಂತೆ ಯಾವುದೇ ಲೋಪ ಆಗದಂತೆ ಪರೀಕ್ಷೆ ನಡೆಸಬೇಕು. ಪರೀಕ್ಷಾ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಆಸನಗಳ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕಾಲೇಜು ಆವರಣದಲ್ಲಿ ಸ್ಪಷ್ಟವಾಗಿ ಸೂಚನಾ ಫಲಕದಲ್ಲಿ ಪರೀಕ್ಷಾ ದಿನ ಪ್ರಕಟಿಸಬೇಕು ಎಂದು ಸೂಚಿಸಿದರು.

ಇನ್‌ಸ್ಟಾಗ್ರಾಮ್, ವಾಟ್ಸ್‌ಆ್ಯಪ್‌ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಇಂತಹ ವದಂತಿ ಹರಡಿಸುವವರ ವಿರುದ್ಧವೂ ಕ್ರಮ ಆಗಲಿದೆ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಸಕಲ ಭದ್ರತೆಯಲ್ಲಿ ಜವಾಬ್ದಾರಿಯುತ ಅಧಿಕಾರಿಗಳ ವ್ಯಾಪ್ತಿಯಲ್ಲಿ ಇರುವುದರಿಂದ ಆಯಾ ಅಧಿಕಾರಿಗಳು ಹೆಚ್ಚಿನ ಜಾಗೃತಿವಹಿಸಬೇಕು ಎಂದರು. 

ಮಾರ್ಗಸೂಚಿಯಂತೆ ಪರೀಕ್ಷೆ ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಸಲು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಸೂಚಿಸಲಾಗಿದೆ. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿ, ‌ಸಿಬ್ಬಂದಿ ಮೊಬೈಲ್ ಬಳಕೆ, ಛಾಯಾಚಿತ್ರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಬೆಳಕಿನ ವ್ಯವಸ್ಥೆ, ಆಸನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು. 

ಪರೀಕ್ಷಾ ಕೇಂದ್ರಗಳಿಂದ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ನಂತರ ನೇರವಾಗಿ ಅಂಚೆ ಕಚೇರಿಗೆ ಪೊಲೀಸ್ ಬೆಂಗಾವಲಿನಲ್ಲಿ ತಲುಪಿಸಬೇಕು.  ಪರೀಕ್ಷೆ ಕೇಂದ್ರಗಳ ಹೊರಗೆ ಜನಸಂದಣಿ ಇರಕೂಡದು. ಜನಸಂದಣಿ ಮೇಲೆ ನಿಗಾ ಇಡಬೇಕು. ಪರೀಕ್ಷೆ ಕೇಂದ್ರಗಳ ಸ್ವಚ್ಛತೆ, ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆ, ಬಳಸುವ ವಾಹನಗಳು, ವೆಬ್ ಕಾಸ್ಟಿಂಗ್ ಸರಿಯಾಗಿರಬೇಕು ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ  200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗುವುದು. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಓದಿಕೊಂಡು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ದಿನ ಅರ್ಧ ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್. ಆದಿಶೇಷರಾವ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.