ಚಿಂತಾಮಣಿ (ಚಿಕ್ಕಬಳ್ಳಾಪುರ): ನಗರದ ವೆಂಕಟಗಿರಿಕೋಟೆಯ ಮನೆಯ ಮಾಲೀಕರೊಬ್ಬರು ರಸ್ತೆ ಮ್ಯಾನ್ಹೋಲ್ಗೆ ಕಾರ್ಮಿಕನೊಬ್ಬನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಮನೆಯ ಮಾಲೀಕರ ವಿರುದ್ಧ ನಗರಸಭೆಯ ಅಧಿಕಾರಿಗಳು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೆಂಕಟಗಿರಿಕೋಟೆಯ ನಿವಾಸಿ ಎಂ.ಸಲ್ಮಾ ಎಂಬುವವರ ಮನೆಯ ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ಲೈನ್ ಕಟ್ಟಿಕೊಂಡಿತ್ತು. ಮ್ಯಾನ್ ಹೋಲ್ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛಗೊಳಿಸಿದ್ದಾರೆ. ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ನಗರಸಭೆಗೆ ದೂರು ನೀಡಿದ್ದಾರೆ.
ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಮಾಲೀಕರು ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕಾರ್ಮಿಕನನ್ನು ಮ್ಯಾನ್ಹೋಲ್ಗೆ ಇಳಿಸಿರುವುದು ಸಾಬೀತಾಗಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಪ್ರಕಾರ ಅಪರಾಧವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಗರಸಭೆಯ ಕಿರಿಯ ಆರೋಗ್ಯಾಧಿಕಾರಿ ವಿಜಯಕುಮಾರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.