ಶಿಡ್ಲಘಟ್ಟ: ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಸಹಕಾರಿ ಸಂಘ ಮಾಡಬೇಕೆಂದು ಕೇಂದ್ರಕ್ಕೆ ಕೋರಲಾಗಿತ್ತು. ಒಂದು ತಿಂಗಳೊಳಗೆ ಪ್ರತ್ಯೇಕಕ್ಕೆ ಅನುಮತಿ ದೊರೆಯಲಿದೆ. ಹೈನುಗಾರಿಕೆ, ಮಗ್ಗ, ರೇಷ್ಮೆ ಸೇರಿದಂತೆ ಸಣ್ಣ ಸಂಘಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಅಭಿವೃದ್ಧಿ ವಿಚಾರ ಬಂದಾಗ ರಾಜಕೀಯ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಡ್ಲಘಟ್ಟದಲ್ಲಿ 9-10 ಕೆರೆಗಳಿಗೆ ಎಚ್.ಎನ್.ವ್ಯಾಲಿಯಿಂದ ನೀರು ತುಂಬಿಸುವ ಯೋಜನೆ ಬಂದಿದೆ. ಈ ಬಗ್ಗೆ ಟೀಕೆಗಳು ಹಲವು ರೀತಿ ಬಂದಿದ್ದವು. ಇಂದು ಕೆರೆಯ ನೀರು ಅವಕ್ಕೆಲ್ಲಾ ದಿಟ್ಟ ಉತ್ತರ ನೀಡಿವೆ. ಪ್ರತಿ ಕೆರೆಗೆ ಈ ಭಾಗದಲ್ಲಿ ನೀರು ತುಂಬಿಸುವ ಯೋಜನೆ ಮಾಡಬೇಕಿದೆ. ಜೊತೆಗೆ ಶಿಡ್ಲಘಟ್ಟದಲ್ಲಿ ಕೈಗಾರಿಕಾ ವಲಯಗಳನ್ನು ನಿರ್ಮಿಸಲಾಗುವುದು ಎಂದರು.
ಕಠಿಣ ಕ್ರಮ
ಮೈಸೂರಿನ ಅತ್ಯಾಚಾರ ಘಟನೆ ದುರದೃಷ್ಟಕರ. ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳಿದ್ದು, ಅತ್ಯಾಚಾರ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಗಟ್ಟಿಯಾದ ನಿರ್ಧಾರ ಕೈಗೊಳ್ಳಲಿದೆ ಎಂದರು.
ಕಾಮಗಾರಿಗೆ ಚಾಲನೆ, ಉದ್ಘಾಟನೆ
ಬಶೆಟ್ಟಿಹಳ್ಳಿ ಬಳಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿದರು. ವಸತಿ ಶಾಲೆ ಕಾಮಗಾರಿಗೆ ಚಾಲನೆ, ನಗರೋತ್ಥಾನದಡಿ ₹4.60 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ, ₹2 ಕೋಟಿ ವೆಚ್ಚದ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.