
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಚಿಕ್ಕಬಳ್ಳಾಪುರ: 4 ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿಯನ್ನು ಬಂಧಿಸಿ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಸಂತ್ರಸ್ತ ಮಗುವಿನ ತಾಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ತಾಯಿ, ‘ಅಂಗಡಿಗೆ ಚಾಕೋಲೇಟ್ ತರಲು ತೆರಳಿದ್ದ ವೇಳೆ 45 ವರ್ಷದ ವ್ಯಕ್ತಿ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತರಲಾಗಿದೆ. ಆದರೆ ನಂತರ ಹಣದ ಆಮಿಷಕ್ಕೆ ಒಳಗಾಗಿ ಪೊಲೀಸರು ಆರೋಪಿಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಮಗುವಿನ ತಾಯಿ ಆರೋಪಿಸಿದ್ದಾರೆ.
ಆರೋಪಿ ನಮ್ಮ ಮನೆಯ ಮುಂದೆ ತಿರುಗಾಡುವುದರಿಂದ ನಮಗೆ ರಕ್ಷಣೆ ಅಗತ್ಯ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡಲೇ ಈ ಬಗ್ಗೆ ಗಮನ ಹರಿಸಿ ನ್ಯಾಯಕೊಡಬೇಕು ಎಂದು ಕೋರಿದರು.
ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಘಟನೆಯ ಕೆ.ಎಸ್.ಅರುಣ್ಕುಮಾರ್ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಅಧಿಕಾರ ದುರುಪಯೋಗ ಪಡಿಸಿಕೊಂಡು ಆರೋಪಿಗಳ ಪರ ನಿಲ್ಲುವ ಮೂಲಕ ಅನ್ಯಾಯಕ್ಕೆ ಒಳಗಾಗದವರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆ ನಡೆಸಬೇಕು. ಆರೋಪಿಯನ್ನು ಜೈಲಿಗಟ್ಟಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು.ಇಲ್ಲವಾದಲ್ಲಿ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗುವುದು ಎಂದರು.
ಸಂಘಟನೆ ಪ್ರಧಾನ ಕಾರ್ಯದರ್ಶಿ ಜಿ.ನವೀನ್ಕುಮಾರ್, ರಾಜ್ಯ ಉಪಾಧ್ಯಕ್ಷ ಪುಟ್ಟರಂಗಯ್ಯ, ಸಂತ್ರಸ್ತ ಮಗುವಿನ ತಂದೆ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.