ಚಿಂತಾಮಣಿ: ತಾಲ್ಲೂಕಿನ ಮುನುಗನಹಳ್ಳಿ ಗ್ರಾಮ ಪಂಚಾಯಿತಿಗೆ ಶನಿವಾರ ಅವಿಸ್ಮರಣೀಯ ದಿನ. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ 2020-21 ನೇ ಸಾಲಿನ ‘ರಾಷ್ಟ್ರೀಯ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ’ಯ ರಾಷ್ಟ್ರೀಯ ಪುರಸ್ಕಾರವನ್ನು ಅಧಿಕೃತವಾಗಿ ವಿತರಿಸಲಾಯಿತು.
ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರಧಾನ ಸಮಾರಂಭ ಕೋವಿಡ್-19 ಹಿನ್ನೆಲೆಯಲ್ಲಿ ವರ್ಚುವಲ್ ವೆಬ್ ವೇದಿಕೆಯ ಮುಖಾಂತರ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪ್ರಶಸ್ತಿಯನ್ನು ವಿತರಿಸಲಾಯಿತು.
ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಪಂಚಾಯಿತಿ ಮೂಲಕ ಆನ್ಲೈನ್ನಲ್ಲಿ ವರ್ಗಾವಣೆ ಮಾಡಿದ ನಂತರ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಉಪಕಾರ್ಯದರ್ಶಿ ನೋಮೇಶಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕವಿತಾಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ
ಮಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲ ಮಕ್ಕಳಿಗೆ ಲಸಿಕೆ ನೀಡಿರುವುದು, ಯಾವ ಮಕ್ಕಳು ಶಾಲೆಯಿಂದ ಹೊರಗುಳಿಯದೆ ಎಲ್ಲ ಮಕ್ಕಳು ಶಾಲೆಗಳಿಗೆ ದಾಖಲು ಮಾಡಿರುವುದು. ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು ರೂಪಿಸಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಆಗಿದೆ.
3 ಮಾದರಿ ಅಂಗನವಾಡಿ, 5 ಶಾಲೆಗಳಿಗೆ ಶಾಲಾವರಣ ನಿರ್ಮಾಣ, 6 ಶಾಲೆಗಳಲ್ಲಿ ಮಳೆನೀರು ಸಂಗ್ರಹ ಹಾಗೂ 2 ಶಾಲೆಗಳಲ್ಲಿ ಪೌಷ್ಟಿಕ ಕೈ ತೋಟ ನಿರ್ಮಾಣ ಮಾಡಲಾಗಿದೆ. ಹಳೆಯ ಕಟ್ಟಡಗಳ ರಿಪೇರಿ, ಅಂಗವಿಕಲರಿಗಾಗಿ ಶೌಚಾಲಯ ನಿರ್ಮಾಣ, ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ನರೇಗಾ ಯೋಜನೆಯಲ್ಲಿ ಮೂಲ ಸೌಲಭ್ಯಗಳಿಗಾಗಿ ಸುಮಾರು ₹52 ಲಕ್ಷ ಶಾಲೆಗಳಿಗಾಗಿ ವ್ಯಯ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡುವ ರಾಷ್ಟ್ರೀಯ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಪಾತ್ರವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.