ಶಿಡ್ಲಘಟ್ಟ: ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರಾಗದಂತೆ ಮಕ್ಕಳನ್ನು ರಕ್ಷಿಸುವಲ್ಲಿ ಶಿಕ್ಷಕರ ಹೊಣೆಗಾರಿಕೆ ಬಹಳಷ್ಟಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ತಿಳಿಸಿದರು.
ನಗರದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೊಜನೆಯಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಮಕ್ಕಳ ರಕ್ಷಣೆಯ ಕಾರ್ಯವಿಧಾನದ ಬಗ್ಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಕ್ಷಕರಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮಕ್ಕಳು ದೇಶವನ್ನು ಮುನ್ನಡೆಸುವ ಮುಂದಿನ ಪ್ರಜೆಗಳು. ಎಳೆ ವಯಸ್ಸಿನಲ್ಲೇ ಮಕ್ಕಳಿಗೆ ಉನ್ನತ ಹುದ್ದೆಗೆ ಏರುವಂತಹ ಕನಸುಗಳನ್ನು ರೂಪಿಸಬೇಕು. ಮಹನೀಯರ ವಿಚಾರಧಾರೆಗಳನ್ನು ತಿಳಿಸಿಕೊಡಬೇಕು. ಆಗ ನಾವು ಉತ್ತಮ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಉತ್ತಮ ಸಮಾಜ ಕಟ್ಟುವ ನಿಟ್ಟಿನಲ್ಲಿ ಮಕ್ಕಳನ್ನು ಉತ್ತಮ ರೀತಿಯಲ್ಲಿ ಮೌಲ್ಯಯುತ ಶಿಕ್ಷಣ ನೀಡಿ ಬೆಳೆಸಬೇಕಿದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್ ಮಾತನಾಡಿ, ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ತಡೆಯಲು ಹಾಗೂ ಅವಶ್ಯವಿರುವ ಮಕ್ಕಳ ರಕ್ಷಣೆ ಮಾಡಿ ಪುನರ್ವಸತಿ ಕಲ್ಪಿಸಲು ಬಾಲ ನ್ಯಾಯ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.
ಕಾನೂನು ಪರಿವೀಕ್ಷಣಾಧಿಕಾರಿ ರಾಮೇಗೌಡ ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಮಕ್ಕಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಲ್ಲಿ ರಚಿಸಲಾಗಿದ್ದು, ಈ ಘಟಕದ ಮೂಲಕ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ಕಾಯ್ದೆಗಳು, ರಾಜ್ಯ ಮಕ್ಕಳ ಕ್ರಿಯಾಯೋಜನೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಇತರೆ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಯವಿಧಾನದ ಬಗ್ಗೆ ವಿವರ ನೀಡಿದರು.
ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಅವರು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಪುನಃ ಶಿಕ್ಷಣ ನೀಡುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎನ್.ತ್ಯಾಗರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗಮಣಿ, ಶಿಕ್ಷಣ ಸಂಯೋಜಕ ಭಾಸ್ಕರ್ ಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.