ಚಿಂತಾಮಣಿ: ಕ್ರೀಡೆಯನ್ನು ಜೀವನ ಶೈಲಿಯಾಗಿ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಚಿಕ್ಕಬಳ್ಳಾಪುರ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಗರದ ವೆಂಕಟಾದ್ರಿ ಪಿ.ಯು ಕಾಲೇಜು ಮತ್ತು ವಿಜಯ ಪಿ.ಯು ಕಾಲೇಜಿನ ಆಶ್ರಯದಲ್ಲಿ ಮಂಗಳವಾರ ನಗರದ ಝಾನ್ಸಿ ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಹಿಂದೆ ಬಿದ್ದು ಕ್ರೀಡೆ ಮತ್ತಿತರ ಪಠ್ಯೇತರ ಚಟುವಟಿಕೆಗಳಿಗೆ ಸಮಯಾವಕಾಶ ನೀಡುತ್ತಿಲ್ಲ. ಕ್ರೀಡೆಗಳು ವಿದ್ಯಾಭ್ಯಾಸದ ಅವಿಭಾಜ್ಯ ಅಂಗ. ದೈಹಿಕ ಮತ್ತು ಮಾನಸಿಕ ದೃಢತೆಯ ಜತೆಗೆ ಮನಸ್ಸಿನ ಏಕಾಗ್ರತೆ ಮೂಡುತ್ತದೆ. ಶರೀರ ಆರೋಗ್ಯಕರವಾಗಿದ್ದರೆ ಯಾವುದೇ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ ಎಂದರು.
ರಾಜ್ಯ ಮತ್ತು ಕೇಂದ್ರ ಸರ್ಕಾರ ಖೇಲೋ ಇಂಡಿಯಾ ಮುಂತಾದ ಹಲವಾರು ಕ್ರೀಡಾ ಯೋಜನೆಗಳನ್ನು ರೂಪಿಸಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಕ್ರೀಡಾಪಟುಗಳಾಗಿ ಎಂದು ಕಿವಿಮಾತು ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆದಿಶೇಷರಾವ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕ್ರೀಡಾ ಮನೋಭಾವನೆಯಿಂದ ಆಟವಾಡಿ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.
ಪಿ.ಯು ಕಾಲೇಜು ಉಪನ್ಯಾಸಕರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಮುನಿರೆಡ್ಡಿ ಮಾತನಾಡಿದರು. ತಹಶೀಲ್ದಾರ್ ಸುದರ್ಶನ್ ಯಾದವ್, ಇಒ ಆನಂದ್, ಪೌರಾಯುಕ್ತ ಚಲಪತಿ, ಸತ್ರೆಂದ್ರ, ವಿಜಿಕುಮಾರ್, ವೆಂಕಟಶಿವರೆಡ್ಡಿ, ಶ್ರೀರಾಮ ರೆಡ್ಡಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.