ಚಿಂತಾಮಣಿ: ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿ. ವಿಶ್ವನಾಥ್ (45) ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇವರು ಮೂಲತಃ ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಬೆಳ್ಳಳ್ಳಿಯವರು. ಇವರಿಗೆ ತಂದೆ, ತಾಯಿ, ಪತ್ನಿ, ಒಂದು ಗಂಡು, ಹೆಣ್ಣು ಸೇರಿ ಇಬ್ಬರು ಮಕ್ಕಳಿದ್ದಾರೆ.
ಠಾಣೆ ಪಕ್ಕದ ಪೊಲೀಸ್ ಕ್ವಾಟ್ರಸ್ನಲ್ಲಿ ಅವರು ವಾಸವಿದ್ದರು. ಸೋಮವಾರ ಸಂಜೆ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಮನೆಗೆ ಮರಳಿದ ಅವರು ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದಾರೆ. ಆರೋಗ್ಯ ಪರೀಕ್ಷಿಸಿದ ವೈದ್ಯರು, ಯಾವುದಾದರೂ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.
ಹೀಗಾಗಿ, ಅವರನ್ನು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ರಾತ್ರಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಅವರು ಗ್ರಾಮಾಂತರ ಠಾಣೆಯಲ್ಲಿ ಐದು ವರ್ಷ ಮತ್ತು ನಗರ ಠಾಣೆಯಲ್ಲಿ 2 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಅವರು ಪ್ರಾಮಾಣಿಕ ಮತ್ತು ದಕ್ಷತೆಗೆ ಹೆಸರು ಗಳಿಸಿದ್ದರು.
ಮಂಗಳವಾರ ಅವರ ಸ್ವಂತ ಗ್ರಾಮ ಬೆಳ್ಳಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.