
ಚಿಂತಾಮಣಿ: ಹೊಸ ವರ್ಷದ ದಿನ ಗುರುವಾರ ದೇವಾಲಯಗಳ ನಗರಿ ಕೈವಾರದಲ್ಲಿ ಅಮರನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಾಲಯ, ಸದ್ಗುರು ಯೋಗಿನಾರೇಯಣ ಮಠದಲ್ಲಿ ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ತಳಿರು ತೋರಣ ಹಾಗೂ ಹೂವುಗಳಿಂದ ದೇವಾಲಯಗಳನ್ನು ಶೃಂಗರಿಸಲಾಗಿತ್ತು.
ಸ್ಥಳೀಯ ಹಾಗೂ ರಾಜ್ಯದ ವಿವಿಧೆಡೆಗಳಿಂದ ಕೈವಾರಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ಹೊಸವರ್ಷದ ಮೊದಲ ದಿನ ದೇವರ ದರ್ಶನ ಪಡೆದರು.
ಸದ್ಗುರು ಯೋಗಿನಾರೇಯಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಘಂಟನಾದ, ಸುಪ್ರಭಾತ, ಗೋಪೂಜೆ, ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಸಮರ್ಪಿಸಲಾಯಿತು. ತಾತಯ್ಯನವರ ಜೀವ ಸಮಾಧಿ ಮೂಲ ಬೃಂದಾವನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ಯೋಗಿನಾರೇಯಣ ಉತ್ಸವ ಮೂರ್ತಿಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ಭಜನೆ, ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಠದ ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಜೆ ವಿಶೇಷ ಮಹಾಮಂಗಳಾರತಿ ನೆರವೇರಿಸಲಾಯಿತು.
ಕೈವಾರದ ಬೆಟ್ಟದ ಮೆಟ್ಟಲುಗಳಿಗೆ ಹೊಸ ವರ್ಷದ ಪ್ರಯುಕ್ತ ದೀಪಾರಾಧನೆ ಮಾಡಲಾಗಿತ್ತು. ಸಂಜೆ ವಿದ್ಯುತ್ ದೀಪಗಳಿಂದ ಬೆಟ್ಟವನ್ನು ಅಲಂಕರಿಸಲಾಗಿತ್ತು. ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ವ್ಯವಸ್ಥೆ ಮಾಡಲಾಗಿತ್ತು.
ಮಹಾಕೈಲಾಸ ಗಿರಿಯಲ್ಲೂ ಹೊಸವರ್ಷದ ಅಂಗವಾಗಿ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.
ನಗರದ ಹೃದಯ ಭಾಗದಲ್ಲಿರುವ ವರದಾದ್ರಿ ಬೆಟ್ಟ, ನಾಗನಾಥೇಶ್ವರಸ್ವಾಮಿ ದೇವಾಲಯ, ಮುರುಗಮಲೆಯ ಮಕ್ತೀಶ್ವರಸ್ವಾಮಿ ದೇವಾಲಯ, ಬೂರಗಮಾಕಲಹಳ್ಳಿಯ ವೀರಾಂಜನೇಯಸ್ವಾಮಿ, ಕುರುಟಹಳ್ಳಿಯ ವೀರಾಂಜನೇಯಸ್ವಾಮಿ ದೇವಾಲಗಳಲ್ಲೂ ವಿಶೇಷ ಕಾರ್ಯಕ್ರಮಗಳು ನೆರವೇರಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.