ಚಿಂತಾಮಣಿ: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಮುಂದಿನ 15 ದಿನಗಳು ನಿರ್ಣಾಯಕವಾಗಿವೆ. ಈ ಅವಧಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮಂಗಳವಾರದಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಸ್.ಎಲ್.ವಿಶ್ವನಾಥ್ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿಯ ಸಭೆಯ ನಂತರ ಮಾತನಾಡಿದರು.
ನಗರದಲ್ಲಿ ಮಂಗಳವಾರದಿಂದ ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗುವುದು. ಜನಜಂಗುಳಿ ಆಗಬಾರದು ಎಂದು ಅಗತ್ಯ ವಸ್ತು
ಗಳಾದ ಆಹಾರ ಪದಾರ್ಥಗಳು, ಹೂ, ಹಣ್ಣು, ತರಕಾರಿಗಳಿಗಾಗಿ ನಗರದ ಎಲ್ಲ ವಾರ್ಡ್ಗಳಲ್ಲಿ ಸ್ಥಳಗಳನ್ನು ಗುರುತಿಸಲಾಗಿದೆ. ಜನರು ಅವರವರ ವಾರ್ಡ್ಗಳಲ್ಲೇ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಅಗತ್ಯವಸ್ತುಗಳನ್ನು ಕಾಳಸಂತೆಯಲ್ಲಿ ಮಾರುವುದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದೂರುಗಳು ಕೇಳಿಬರುತ್ತಿವೆ. ಅಧಿಕೃತವಾಗಿ ತನಿಖೆ ನಡೆಸಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
ಡಿವೈಎಸ್ಪಿ ಶ್ರೀನಿವಾಸ್, ಇನ್ಸ್ಪೆಕ್ಟರ್ ಆನಂದ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ, ಪೌರಾಯುಕ್ತ ಹರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ರಾಮಚಂದ್ರಾರೆಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.