ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ’ ಎಂದು ಮಾದರಿ ನೀತಿ ಸಂಹಿತೆಯ ವಿಶೇಷ ಅಧಿಕಾರಿ ಮುನಿಷ್ ಮೌದ್ಗಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸೆಕ್ಟರ್ ಅಧಿಕಾರಿಗಳು, ಮೂರು ವಿಡಿಯೊ ಕಣ್ಗಾವಲು ತಂಡಗಳು, ಎರಡು ವಿಡಿಯೋ ಪರಿವೀಕ್ಷಣೆ ತಂಡ, ಸಿವಿಜಿಲ್ ತಂಡಗಳು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ನೀತಿ ಸಂಹಿತೆ ಉಲ್ಲಂಘಸಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಬೇಕು’ ಎಂದು ಹೇಳಿದರು.
‘ಮುಕ್ತ, ನ್ಯಾಯಸಮ್ಮತ ಚುನಾವಣೆ, ಮತದಾನ ನಡೆಸಲು ಸಾರ್ವಜನಿಕರಿಗೆ ಸೂಕ್ತವಾದ ವಾತಾವರಣ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಏಜೆಂಟರು ಹಾಗೂ ಸಾರ್ವಜನಿಕರು ಯಾವುದೇ ದೂರಗಳನ್ನು ನಿರ್ಭಯವಾಗಿ ನೀಡಬಹುದು. ಇದಕ್ಕಾಗಿ ದೂರವಾಣಿ ಸಂಖ್ಯೆ 990009911ಗೆ ಸಂಪರ್ಕಿಸಬಹುದು’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಬಿ. ಫೌಜಿಯಾ ತರನ್ನುಮ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಚುನಾವಣಾ ವೀಕ್ಷಕ ವೆಂಕಟಮುರಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಏಜೆಂಟ್ರು ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.