ಚಿಕ್ಕಬಳ್ಳಾಪುರ: ‘ಇವತ್ತು ಶಿಕ್ಷಣ ಕ್ಷೇತ್ರವನ್ನು ಸಾಕಷ್ಟು ಸಮಸ್ಯೆಗಳು ಕಾಡುತ್ತಿವೆ. ಆ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ನಾನು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಮತದಾರರು ಈ ಬಾರಿ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಸ್ಪರ್ಧಾ ವಿಜೇತ ಐ.ಎ.ಎಸ್, ಕೆ.ಎ.ಎಸ್ ಕೆರಿಯರ್ ಅಕಾಡೆಮಿಯ ನಿರ್ದೇಶಕ ಕೆ.ಎಂ.ಸುರೇಶ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿಕ್ಷಣ ಕ್ಷೇತ್ರದಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಉಪನ್ಯಾಸಕನಾಗಿ, ಸಂಶೋಧಕನಾಗಿ ಮತ್ತು ಪ್ರಾಂಶುಪಾಲನಾಗಿ ಕಾರ್ಯನಿರ್ವಹಿಸಿದ್ದೇನೆ. ಈ ನನ್ನ ಅನುಭವವನ್ನು ಶಿಕ್ಷಣ ಕ್ಷೇತ್ರಕ್ಕೆ ಧಾರೆ ಎರೆಯಲು ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವೆ. ಟಿಕೆಟ್ ನೀಡಿದರೆ ಬಿಜೆಪಿಯಿಂದ ಸ್ಪರ್ಧಿಸುತ್ತೆನೆ. ಟಿಕೆಟ್ ನೀಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವೆ’ ಎಂದು ಹೇಳಿದರು.
‘ಈ ಚುನಾವಣೆಯಲ್ಲಿ ಆಯ್ಕೆಗೊಂಡರೆ ತುಮಕೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ಗ್ರಂಥಾಲಯ, ಉಚಿತ ಸ್ಪರ್ಧಾತ್ಮಕ ತರಬೇತಿ ಸೌಲಭ್ಯ ಹೊಂದಿರುವ ಸ್ಪರ್ಧಾ ಭವನ ನಿರ್ಮಿಸುತ್ತೇನೆ‘ ಎಂದು ಭರವಸೆ ನೀಡಿದರು.
‘ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳುವೆ.ಆನ್ಲೈನ್ ಪರೀಕ್ಷೆ ನಡೆಸುವುದು, ಶಿಕ್ಷಕರ ಸಮಸ್ಯೆಗಳ ಬಗೆಹರಿಸುವುದು, ದೈಹಿಕ ಶಿಕ್ಷಕರ ನೇಮಕಾತಿಗೆ ಒತ್ತಾಯಿಸುವುದು, ವೈದ್ಯನಾಥನ್ ವರದಿ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು. ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ಮುಖಂಡರಾದ ಶ್ರೀನಾಥ್, ಸುರೇಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.