ADVERTISEMENT

ಆದ್ಯತೆಯಲ್ಲಿ ನರೇಗಾ ಕಾಮಗಾರಿ ಪೂರ್ಣಗೊಳಿಸಿ: ಚಿಕ್ಕಬಳ್ಳಾಪುರ ಜಿ.ಪಂ ಸಿಇಒ ಸೂಚನೆ

ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಒ ಬಿ.ಫೌಜಿಯಾ ತರನ್ನುಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 14:11 IST
Last Updated 18 ಆಗಸ್ಟ್ 2020, 14:11 IST
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರೋಜ್‌ಗಾರ್ ದಿವಸ್ ಆಚರಿಸುವ ಜತೆಗೆ ಕೋವಿಡ್-19 ತುರ್ತು ಸಂದರ್ಭದಲ್ಲಿ ಉದ್ಯೋಗ ಕೊಡಲು ಹೊಸ ಉದ್ಯೋಗ ಚೀಟಿಯನ್ನು ನೀಡಿ ಉದ್ಯೋಗ ಕಲ್ಪಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಒಳಗೆ ಶಾಲಾ ಕಾಲೇಜು, ಆಸ್ಪತ್ರೆ, ಗ್ರಂಥಾಲಯ, ಅಂಗನವಾಡಿ, ಪೊಲೀಸ್ ಠಾಣೆ, ಹಾಸ್ಟೆಲ್ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಹಾಗೂ ಇಂಗು ಗುಂಡಿ ಕಡ್ಡಾಯವಾಗಿ ನಿರ್ಮಾಣ ಮಾಡಬೇಕು. ಉಳಿಕೆ ಇರುವ ನರೇಗಾ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಹೇಳಿದರು.

ADVERTISEMENT

‘ನರೇಗಾ ಯೋಜನೆಯಡಿ ನಿರ್ಮಾಣ ಮಾಡುತ್ತಿರುವ ಮಾದರಿ ಶಾಲೆಗಳು, ಅಂಗನವಾಡಿ ಕಟ್ಟಡಗಳನ್ನು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಮುಗಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರೋಜ್ ಗಾರ್ ದಿವಸ್ ದಿನ ಮತ್ತು ಉದ್ಯೋಗ ಚೀಟಿ ಹಾಗೂ ನರೇಗಾ ಯೋಜನೆ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಾದ್ಯಂತ ನರೇಗಾ ಯೋಜನೆಯಡಿ ಮಾದರಿ ಶಾಲೆಗಳಲ್ಲಿ ಕೈ ತೋಟ, ಶೌಚಾಲಯ, ಮಳೆ ನೀರು ಸಂಗ್ರಹ ವ್ಯವಸ್ಥೆ, ಇಂಗು ಗುಂಡಿ ನಿರ್ಮಾಣ ಮಾಡಬೇಕು. ಈಗಾಗಲೇ ಶಾಲೆ ಹಾಗೂ ಅಂಗನವಾಡಿಗಳಿಗೆ ನಿರ್ಮಿಸಿರುವ ತಡೆಗೋಡೆಗೆ ಮಕ್ಕಳನ್ನು ಆಕರ್ಷಿಸುವಂತೆ ಬಣ್ಣವನ್ನು ಬಳಿಸಬೇಕು’ ಎಂದರು.

‘ನರೇಗಾ ಯೋಜನೆಯ ಮೂಲ ಉದ್ದೇಶ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದಾಗಿದೆ. ಆದ್ದರಿಂದ ನರೇಗ ಕಾಮಗಾರಿಗಳಲ್ಲಿ ಮಹಿಳೆಯರು ಹೆಚ್ಚು ಭಾಗವಹಿಸುವಂತೆ ಸ್ಥಳಿಯ ಮಟ್ಟದ ಅಧಿಕಾರಿಗಳು ಅರಿವು ಮೂಡಿಸಬೇಕು. ಯಾವುದೇ ಕಾರಣಕ್ಕೂ ಜೆಸಿಬಿ ಸೇರಿದಂತೆ ಯಾವುದೇ ಯಂತ್ರಗಳನ್ನು ಬಳಸಿ ಕಾಮಗಾರಿಗಳನ್ನು ಮಾಡಬಾರದು’ ಎಂದು ಹೇಳಿದರು.

‘ತಾಲ್ಲೂಕು ಮತ್ತು ಸ್ಥಳಿಯ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರು ಕೃಷಿ ಉಪಕಸುಬುಗಳಾದ ಕುರಿ ಸಾಕಾಣಿಕೆ, ಪಶು ಸಂಗೋಪನೆ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಇತರೆ ಚಟುವಟಿಕೆಗಳಿಗೆ ಗುರುತಿಸಿರುವ ಸ್ಥಳದ ಪರಿಶೀಲನೆಯನ್ನು ಮಾಡಬೇಕು. ಜಾನುವಾರು ಶೆಡ್ ನಿರ್ಮಿಸಿಕೊಳ್ಳಲು ಮುಂದೆ ಬರುವ ರೈತರಿಗೆ ಸಹಾಯ ಮಾಡಬೇಕು’ ಎಂದು ತಿಳಿಸಿದರು.

‘ಖಾಸಗಿ ಕೊಳವೆಬಾವಿಗಳಿಗೆ ನರೇಗಾ ಯೋಜನೆ ಅಡಿಯಲ್ಲಿ ಮರುಪೂರಣ, ಸೇರಿದಂತೆ ರೈತರಿಗೆ ಅವಶ್ಯವಿರುವ ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕವನ್ನು ಪ್ಯಾಕೇಜ್ ರೀತಿ ತೆಗೆದುಕೊಳ್ಳುವ ವ್ಯವಸ್ಥೆ ಇದೆ. ಈ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನೋಮೇಶ್ ಕುಮಾರ್, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.