ADVERTISEMENT

ಚಿಕ್ಕಬಳ್ಳಾಪುರ | ಕಾಂಗ್ರೆಸ್ ಭಿನ್ನಾಭಿಪ್ರಾಯಕ್ಕೆ ಶೀಘ್ರ ಪರಿಹಾರ: ಕೇಶವರೆಡ್ಡಿ

ನಾಳೆ ಗ್ಯಾರಂಟಿ ಯೋಜನೆಯ ರಾಜ್ಯ ಮಟ್ಟದ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 5:56 IST
Last Updated 2 ಸೆಪ್ಟೆಂಬರ್ 2025, 5:56 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಯಲುವಳ್ಳಿ ರಮೇಶ್ ಮಾತನಾಡಿದರು
ಚಿಕ್ಕಬಳ್ಳಾಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಯಲುವಳ್ಳಿ ರಮೇಶ್ ಮಾತನಾಡಿದರು   

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿನ ಭಿನ್ನಾಭಿಪ್ರಾಯಗಳು ಪಕ್ಷದ ವರಿಷ್ಠರ ಗಮನಕ್ಕೆ ಬಂದಿವೆ. ಶೀಘ್ರದಲ್ಲಿಯೇ ಅವುಗಳಿಗೆ ಪರಿಹಾರ ದೊರೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ತಿಳಿಸಿದರು. 

ನಗರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಡ್ಲಘಟ್ಟ ಕಾಂಗ್ರೆಸ್‌ನಲ್ಲಿನ ಭಿನ್ನಮತದ ವಿಚಾರವು ಸಚಿವರ ಗಮನಕ್ಕೆ ಬಂದಿದೆ.  ಬಗರ್‌ಹುಕುಂ ಸಮಿತಿ ಸೇರಿದಂತೆ ನಿಗಮಗಳಿಗೆ ನಾಮನಿರ್ದೇಶನವೂ ನಡೆಯಲಿದೆ ಎಂದರು.

ಪಕ್ಷ ಎಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಆ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಾಗುವುದು. ಶಾಸಕ ಪ್ರದೀಪ್ ಈಶ್ವರ್ ವೈಯಕ್ತಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿಲ್ಲ ಎನಿಸುತ್ತದೆ. ಪಕ್ಷದ ವರಿಷ್ಠರು ಚಿಕ್ಕಬಳ್ಳಾಪುರದ ಬೆಳವಣಿಗೆಗಳನ್ನು ಗಮನಿಸುತ್ತಿದ್ದು ಸರಿಪಡಿಸುವರು ಎಂದು ಹೇಳಿದರು

ADVERTISEMENT

‘ಪ್ರದೀಪ್ ಈಶ್ವರ್ ಮನೆ ಖಾಲಿ ಮಾಡಿರುವುದು ನನಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ವಿಚಾರ. ಸರ್ಕಾರದ ಮಟ್ಟದ ವಿಚಾರಗಳಾಗಿದ್ದರೆ ತಿಳಿಯುತ್ತಿತ್ತು’ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಸೆ.3ರಂದು ‌ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ’ ಎಂದರು.

ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್‌.ಎಂ.ರೇವಣ್ಣ, ಉಪಾಧ್ಯಕ್ಷರು ‍ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಶಕ್ತಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು ಸಹ ಭಾಗಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿಯಾಗಿವೆ. ‘ಶಕ್ತಿ’ ಯೋಜನೆಯಡಿ 500 ಕೋಟಿ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದು ದಾಖಲೆ ಎಂದರು.

ಕಾರ್ಯಾಗಾರದಲ್ಲಿ ನಾವು ಪ್ರೇಕ್ಷಕರಾಗಿ ಪಾಲ್ಗೊಳ್ಳುತ್ತೇವೆ. ಜಿಲ್ಲೆಯಲ್ಲಿನ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಪಾಲ್ಗೊಳ್ಳುವರು ಎಂದರು.

ಗ್ಯಾರಂಟಿ ಯೋಜನಾ ಪ್ರಾಧಿಕಾರದ ಎಂ.ಜಯರಾಂ, ಜಿ.ಎನ್.ಆದಿರೆಡ್ಡಿ, ರಮೇಶ, ಶ್ರೀಧರ್, ನರೇಂದ್ರ, ಮಧುಸೂದನ್ ರೆಡ್ಡಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.