ADVERTISEMENT

‘ಕಾಂಗ್ರೆಸ್‌ಗೆ ಪ್ರದರ್ಶನಕ್ಕಷ್ಟೇ ಸಂವಿಧಾನ’

ಬಿಜೆಪಿಯಿಂದ ಸಂವಿಧಾನ ಸಮರ್ಪಣಾ ದಿನ ಹಾಗೂ ಭೀಮ ಸ್ಮರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 4:57 IST
Last Updated 27 ನವೆಂಬರ್ 2025, 4:57 IST
ಸಂವಿಧಾನ ಸಮರ್ಪಣಾ ದಿನ ಮತ್ತು ಭೀಮ ಸ್ಮರಣೆ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಮೆರವಣಿಗೆ ನಡೆಯಿತು
ಸಂವಿಧಾನ ಸಮರ್ಪಣಾ ದಿನ ಮತ್ತು ಭೀಮ ಸ್ಮರಣೆ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಮೆರವಣಿಗೆ ನಡೆಯಿತು   

ಚಿಕ್ಕಬಳ್ಳಾಪುರ: ‘ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಬಗ್ಗೆ ಕಾಳಜಿ ಇಲ್ಲ. ಸಂವಿಧಾನ ಪ್ರತಿ ಹಿಡಿದು ಬರಿ ಪ್ರದರ್ಶನವನ್ನಷ್ಟೇ ಮಾಡುವರಷ್ಟೇ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಟೀಕಿಸಿದರು.

ನಗರದಲ್ಲಿ ಬಿಜೆಪಿಯಿಂದ ಬುಧವಾರ ನಡೆದ ‘ಸಂವಿಧಾನ ಸಮರ್ಪಣಾ ದಿನ’ ಹಾಗೂ ‘ಭೀಮ ಸ್ಮರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನವನ್ನು ಅಪಮಾನಿಸುವ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿವೆ. ಆಡಳಿತ ನಡೆಸುವವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಆದರೆ ಇವರು ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಮರೆತಿದ್ದಾರೆ ಎಂದರು.

ADVERTISEMENT

ಕಬ್ಬು ಬೆಳೆಗಾರರ ಸಮಸ್ಯೆ ಈಡೇರಿಸಲು ಸಾಧ್ಯವಾಗಲಿಲ್ಲ. ಕ್ವಿಂಟಲ್‌ಗೆ ₹ 3,500 ಬೆಲೆ ನೀಡಲು ಸಾಧ್ಯವಾಗಲಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಮಾಡದೆ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ಸಾರ್ವಜನಿಕರ ಹಿತಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಆದರೆ ಕಾಂಗ್ರೆಸ್ ಆ ರೀತಿಯಲ್ಲಿ ಮಾಡಲಿಲ್ಲ ಎಂದು ಟೀಕಿಸಿದರು. 

ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರು ಸಂಸತ್ತಿಗೆ ಬರಬಾರದು ಎಂದು ಅವರನ್ನು ಸೋಲಿಸಿದ್ದು ಕಾಂಗ್ರೆಸ್‌. ಆದರೆ ಈಗ ಯಾವಾಗಲೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಿಡಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿದರು.

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ನಗರದಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಅವರ ಬ್ಯಾನರ್‌ಗಳನ್ನು ಇಲ್ಲಿನ ಶಾಸಕರು ತೆಗೆಸಿದ್ದಾರೆ. ಇವರು ಅಂಬೇಡ್ಕರ್ ಅವರ ಮನೆಯಲ್ಲಿ ಹುಟ್ಟಿದ ರೀತಿಯಲ್ಲಿ ಮಾತನಾಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷವು ದಲಿತರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ನುಂಗಿ ನೀರು ಕುಡಿದಿದೆ. ಕಾಂಗ್ರೆಸ್‌ಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಪಕ್ಷ ಬಿಜೆಪಿ. ರಾಜ್ಯದಲ್ಲಿ ರಸ್ತೆಗಳ ಗುಂಡಿ ಮುಚ್ಚಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ದೇಶದಲ್ಲಿ ಬಹುಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ. ಆ ಕಾರಣದಿಂದಲೇ ಬಹುಸಂಖ್ಯಾತರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿರುವ ಅವಮಾನ ಮತ್ತು ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ವಿಚಾರವಾಗಿ ನೀಡಿರುವ ಕೊಡುಗೆಗಳನ್ನು ಗಮನಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರು ಅಭಿವೃದ್ಧಿಯ ವಿಚಾರವಾಗಿ ಎಲ್ಲ ವರ್ಗದವರಿಗೆ ಸಮಾನ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದರು. 

ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು, ಆರ್‌ಎಸ್‌ಎಸ್‌ನ ವಾದಿರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ರಾಜ್ಯ ಎಸ್‌ಸಿ ಘಟಕ ಉಪಾಧ್ಯಕ್ಷ ಹೂಡಿ ಮಂಜುನಾಥ್, ಬಾಲಕುಂಟಹಳ್ಳಿ ಗಂಗಾಧರ್, ಕೃಷ್ಣಮೂರ್ತಿ, ಆನಂದ್ ಸೇರಿದಂತೆ ಬಿಜೆಪಿಯ ಎಸ್‌ಸಿ ಮತ್ತು ಎಸ್‌ಟಿ ಘಟಕದ ಮುಖಂಡರು ಪಾಲ್ಗೊಂಡಿದ್ದರು.

‘ಕಾಂಗ್ರೆಸ್ ಸರ್ಕಾರ ಬಿದ್ದರೆ; ಬಿಜೆಪಿಯಿಂದ ಸರ್ಕಾರ ರಚನೆಗೆ ಪ್ರಯತ್ನ’

ಕಾಂಗ್ರೆಸ್‌ನ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ ಎಂದು ಡಿ.ವಿ. ಸದಾನಂದಗೌಡ ತಿಳಿಸಿದರು. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು. ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚಿಸಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಆದ್ದರಿಂದ ಈ ಸರ್ಕಾರ ಇರಬಾರದು. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆಯಷ್ಟೇ ಎಂದರು.

ಮೆರವಣಿಗೆ

ಎಂ.ಜಿ ರಸ್ತೆಯ ಜೈ ಭೀಮ್ ಹಾಸ್ಟೆಲ್ ಬಳಿಯ ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಬಿಜೆಪಿ ಮುಖಂಡರು ಮಾಲಾರ್ಪಣೆ ಮಾಡಿದರು. ಸಂವಿಧಾನ ಪ್ರತಿಯನ್ನು ಬಲಮುರಿ ಸರ್ಕಲ್‌ನಿಂದ ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಹೂವಿನ ಬುಟ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಮುಖಂಡರು ಮೆರವಣಿಗೆಯಲ್ಲಿ ಬಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.