ಚಿಕ್ಕಬಳ್ಳಾಪುರ: ಕೋವಿಡ್ ತಡೆಗಟ್ಟಲು ದೇಶದಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ನೀಡುತ್ತಿರುವ ಲಸಿಕಾ ಅಭಿಯಾನ ಯಶಸ್ವಿಯಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಯಶಸ್ವಿಗೊಳಿಸಬೇಕು ಎಂದು ಎಸ್. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಾರೆಡ್ಡಿ ಮನವಿ ಮಾಡಿದರು.
ತಾಲ್ಲೂಕಿನ ಎಸ್. ಗೊಲ್ಲಹಳ್ಳಿ ಗ್ರಾಮದ ಮಾದರಿ ನ್ಯಾಷನಲ್ ಗ್ರಾಮಾಂತರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಸಹಯೋಗದಡಿ ಹಮ್ಮಿಕೊಂಡಿದ್ದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.
ಕೋವಿಡ್ ಸಾಂಕ್ರಾಮಿಕ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅವಿರತವಾಗಿ ಶ್ರಮಿಸುತ್ತಿವೆ. ಇದಕ್ಕೆ ನಾಗರಿಕರು ಸಹಕಾರ ನೀಡಬೇಕು ಎಂದು ಕೋರಿದರು.
ಮಾದರಿ ನ್ಯಾಷನಲ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ಕೋವಿಡ್ ಲಸಿಕೆ ಪಡೆಯಲು ಭಯ ಬೇಡ. ವಿದ್ಯಾರ್ಥಿಗಳು, ಯುವಜನರು ಲಸಿಕೆ ಪಡೆಯುವ ಜೊತೆಗೆ ಈವರೆಗೆ ಲಸಿಕೆ ಪಡೆಯದ ಇತರರೂ ಪಡೆಯುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ಕನ್ನಡ ಉಪನ್ಯಾಸಕ ಎನ್. ಚಂದ್ರಶೇಖರ್ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಡೋಸ್ ಲಸಿಕೆ ಶೇ 100ರಷ್ಟು ಹಾಗೂ ಎರಡನೇ ಡೋಸ್ ನೀಡಿಕೆಯಲ್ಲಿ ಶೇ 81ರಷ್ಟು ಸಾಧನೆಯಾಗಿರುವ ಬಗ್ಗೆ ಮಾಹಿತಿ ಇದೆ. ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳು 65,648 ಇದ್ದಾರೆ ಎಂದು ಗುರುತಿಸಲಾಗಿದೆ. ಈ ಎಲ್ಲರಿಗೂ ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು
ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ನರಸಿಂಹಪ್ಪ, ಪಿಡಿಒ ಚಿಕ್ಕನರಸಿಂಹಯ್ಯ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.