ADVERTISEMENT

ಜಿಲ್ಲೆ ಅಭಿವೃದ್ಧಿಗೆ ಸಮನ್ವಯ ಮುಖ್ಯ: ಕೆ.ಸಿ.ರಾಜಾಕಾಂತ್

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 15:35 IST
Last Updated 1 ಜುಲೈ 2020, 15:35 IST
ಕುಡಿಯುವ ನೀರಿನ ಸಮಸ್ಯೆ
ಕುಡಿಯುವ ನೀರಿನ ಸಮಸ್ಯೆ   

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಖ್ಯವಾಗಿದೆ. ಅದನ್ನು ಬಗೆಹರಿಸುವುದೇ ನಮ್ಮ ಮುಖ್ಯ ಉದ್ದೇಶ’ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈವರೆಗೆ ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳು ಎಂದು ಘೋಷಿಸಿಲ್ಲ. ಆದ್ದರಿಂದ ಈ ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸಲು ಕಷ್ಟವಾಗುತ್ತಿದೆ. ಈ ವಿಚಾರವಾಗಿ ಈಗಾಗಲೇ ಸಚಿವರೊಂದಿಗೆ ಚರ್ಚಿಸಲಾಗಿದೆ’ ಎಂದು ತಿಳಿಸಿದರು.

‘ಆದಷ್ಟು ಬೇಗ ಉಳಿದ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿಸಿ, ಸರ್ಕಾರದ ಅನುಮತಿ ತೆಗೆದುಕೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು. ಅಭಿವೃದ್ಧಿಯಲ್ಲಿ ಅಧಿಕಾರಿಗಳ ಸಹಕಾರವೂ ಮುಖ್ಯ. ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ಜಿಲ್ಲೆ ಪ್ರಗತಿ ಹೊಂದಲು ಸಾಧ್ಯ’ ಎಂದರು.

ADVERTISEMENT

‘ಜಿಲ್ಲೆಯ ಸಾರ್ವಜನಿಕರು, ಕೃಷಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅವುಗಳ ಬಗ್ಗೆ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಬಗೆಹರಿಸಲಾಗುವುದು. ಜಿಲ್ಲೆಯನ್ನು ಗುಡಿಸಲು ಮುಕ್ತಗೊಳಿಸುವುದು ನಮ್ಮ ಗುರಿಯಾಗಿದೆ’ ಎಂದು ಹೇಳಿದರು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುನಿಯಪ್ಪ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಂ ಮುನೇಗೌಡ, ಎನ್.ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.