ಬಾಗೇಪಲ್ಲಿ: ಮುಂಬೈನಿಂದ ಬಂದ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.
ಗರ್ಭಿಣಿ ಕುಟುಂಬದವರಿಗೆ ಸೋಂಕು ಇಲ್ಲ: ಪಟ್ಟಣದ 22ನೇ ವಾರ್ಡ್ನಲ್ಲಿ ಕೊರೊನಾ ಸೋಂಕು ಪೀಡಿತ ಗರ್ಭಿಣಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಕುಟುಂಬದ 6 ಮಂದಿ ಹಾಗೂ ಅವರಿಗೆ ಚಿಕಿತ್ಸೆ ನೀಡಿದ್ದ ಪಟ್ಟಣದ ಸಂತೆ ಮೈದಾನದ ಖಾಸಗಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿಲ್ಲ. ಇದರಿಂದ ತಾಲ್ಲೂಕು ಆಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ನಿಟ್ಟುಸಿರು ಬಿಟ್ಟಿವೆ.
ಪಟ್ಟಣದ 22 ನೇ ವಾರ್ಡ್ನಲ್ಲಿ ಪೊಲೀಸರು ಡ್ರೋಣ್ ಕ್ಯಾಮೆರಾ ಮೂಲಕ ಜನಜಾಗೃತಿ ಮೂಡಿಸಿದರು. ವಾರ್ಡ್ನಲ್ಲಿ ಸೋಂಕು ಹರಡದಂತೆ ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮನೆ, ಚರಂಡಿ, ಖಾಲಿ ನಿವೇಶನಗಳಲ್ಲಿ ಪೌರ ಕಾರ್ಮಿಕರು ಸೋಂಕು ನಿವಾರಕಗಳನ್ನು ಸಿಂಪಡಿಸಿದರು.
ಆರೋಗ್ಯ ಇಲಾಖೆಯ ಶುಶ್ರೂಷಕಿಯರು ಮನೆ ಮನೆಗೂ ತೆರಳಿ ಆರೋಗ್ಯ ತಪಾಸಣೆ ಮಾಡಿದರು.
‘ಜನರು ಸ್ವಯಂಪ್ರೇರಿತವಾಗಿ ಗೃಹಬಂಧನಕ್ಕೆ ಒಳಗಾಗಬೇಕು. ಭಯ ಬೇಡ, ಎಚ್ಚರಿಕೆ ಇರಲಿ, ಅನಗತ್ಯವಾಗಿ ಹೊರಗೆ ಬರಬಾರದು. ಸೋಂಕು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ಮಾಡಲಾಗುತ್ತಿದೆ. ವಾರ್ಡ್ಗಳು ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಹೊರ ರಾಜ್ಯ, ಜಿಲ್ಲೆ, ತಾಲ್ಲೂಕುಗಳಿಂದ ಬರದಂತೆ ನೋಡಿಕೊಳ್ಳಬೇಕು. ಹೊಸಬರು ಬಂದರೆ ಸಹಾಯವಾಣಿಗೆ, ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರು ಹೆಸರನ್ನು ಗೋಪ್ಯವಾಗಿ ಇಡಲಾಗುವುದು’ ಎಂದು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.