ಚಿಕ್ಕಬಳ್ಳಾಪುರ: ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಾಪಾಸಾಗಿರುವ ಕಾರ್ಮಿಕರ ಪೈಕಿ ಶನಿವಾರ ಮತ್ತೆ ಇಬ್ಬರಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಜಿಲ್ಲೆಗೆ ಮುಂಬೈನಿಂದ ವಾಪಾಸಾಗಿರುವ 338 ಕಾರ್ಮಿಕರ ಪೈಕಿ ಈವರೆಗೆ 334 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 117 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಶನಿವಾರ ಗೌರಿಬಿದನೂರು ತಾಲ್ಲೂಕಿನ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಪತ್ತೆಯಾಗಿದೆ.
ಸೋಂಕಿತರ ಪೈಕಿ ಚಿಕ್ಕಬಳ್ಳಾಪುರದ ಇಬ್ಬರು, ಗೌರಿಬಿದನೂರಿನ ಒಬ್ಬರು ಮೃತಪಟ್ಟಿದ್ದಾರೆ. ಶನಿವಾರ ಒಂದೇ ದಿನ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾದ 19 ಜನರನ್ನು ಬಿಡುಗಡೆಗೊಳಿಸಿ, ಬೇರೆಡೆ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈವರೆಗೆ 74 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 73 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ 11,338 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 10,243 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಇನ್ನುಳಿದಂತೆ ಗೌರಿಬಿದನೂರಿನ 84, ಬಾಗೇಪಲ್ಲಿಯ 49, ಚಿಕ್ಕಬಳ್ಳಾಪುರದ 11 ಮತ್ತು ಚಿಂತಾಮಣಿಯ 6 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.