ADVERTISEMENT

ಕೋವಿಡ್‌ನಿಂದ ಉಪನ್ಯಾಸಕ ಎಂ.ಎನ್.ರಘು ಸಾವು

​ಪ್ರಜಾವಾಣಿ ವಾರ್ತೆ
Published 17 ಮೇ 2021, 2:41 IST
Last Updated 17 ಮೇ 2021, 2:41 IST
ಎಂ.ಎನ್.ರಘು
ಎಂ.ಎನ್.ರಘು   

ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಎಂ.ಎನ್.ರಘು(40) ಭಾನುವಾರ ಕೊರೊನಾದಿಂದ ಮೃತರಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ‍ಪುತ್ರರು ಇದ್ದಾರೆ.

ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ರಘು ಜಿಲ್ಲಾಡಳಿತ, ತಾಲ್ಲೂಕು ಆಡಳಿತದ ಎಲ್ಲ ಕಾರ್ಯಕ್ರಮಗಳಲ್ಲಿ, ಚುನಾವಣೆಗಳ ಮಾಸ್ಟರ್ ತರಬೇತುದಾರರಾಗಿದ್ದರು. ಒಂದು ವರ್ಷದಿಂದಕೊರೊನಾ ಸೈನಿಕ ಸಂಘಟನೆಯ ಸಂಚಾಲಕರಾಗಿ ನಗರ ಹಾಗೂ ತಾಲ್ಲೂಕಿನ ಗ್ರಾಮಗಳಲ್ಲಿ ಸಂಚರಿಸಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.

ಕಾಲೇಜಿನಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಇತಿಹಾಸ ಸೆಮಿನಾರ್ ಸಂಘಟಿಸುತ್ತಿದ್ದರು. ಇತ್ತೀಚೆಗೆ ಅಂತರರಾಷ್ಟ್ರೀಯ ವೆಬಿನಾರ್ ಸಮ್ಮೇಳನ ಸಂಘಟಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿಯೂ ಉತ್ತಮ ಹೆಸರು ಗಳಿಸಿದ್ದರು. ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ADVERTISEMENT

ಆರಂಭದಲ್ಲಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದರು. ಅವರ ಸಮಾಜಮುಖಿ ಕಾರ್ಯಗಳು ತಾಲ್ಲೂಕಿನಲ್ಲಿ ಪ್ರಸಿದ್ಧರನ್ನಾಗಿಸಿತ್ತು. ರಘು ಸಾವಿನ ಸುದ್ದಿಯನ್ನು ಕೇಳಿ ತಾಲ್ಲೂಕಿನ ಜನರು ಕಂಬನಿ ಮಿಡಿಯುತ್ತಿದ್ದಾರೆ.

‘ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣಗಳು’ ಎಂಬ ಕೃತಿಯನ್ನು ಹೊರತಂದಿದ್ದರು. ಜಿಲ್ಲೆಯ ಇತಿಹಾಸದ ಬಗ್ಗೆ ಹಲವಾರು ಸಂಶೋಧನೆಗಳನ್ನು ಕೈಗೊಂಡಿದ್ದರು.

ಕಳೆದ 14 ದಿನಗಳಿಂದ ಚಿಕ್ಕಬಳ್ಳಾಪುರದ ಅನನ್ಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಬೆಂಗಳೂರಿನ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕ್ಕಬಳ್ಳಾಪುರ ತಾಲ್ಲೂಕು ಮುಷ್ಟೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.