ADVERTISEMENT

ಕಾಂಗ್ರೆಸ್ ಪ್ರತಿಭಟನೆ ಖಂಡನೀಯ: ಸಿಪಿಎಂ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:07 IST
Last Updated 8 ಜನವರಿ 2021, 7:07 IST

ಬಾಗೇಪಲ್ಲಿ: ‘ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವವರ ವಿರುದ್ಧ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಒಬ್ಬ ವ್ಯಕ್ತಿಯನ್ನು ಮೆಚ್ಚಿಸಲು ಗಂಟೆಗಳ ಕಾಲ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ಮಾಡಿ ಜನರಿಗೆ ತೊಂದರೆ ನೀಡಿರುವುದು ಖಂಡನೀಯ’ ಎಂದು ಸಿಪಿಐ(ಎಂ) ಯುವ ಮುಖಂಡ ಎಂ.ಪಿ.ಮುನಿವೆಂಕಟಪ್ಪ ಆರೋಪಿಸಿದ್ದಾರೆ.

‘ಎಸ್.ಎನ್.ಸುಬ್ಬಾರೆಡ್ಡಿ ಅವರು ಗುಂಜೂರು ಶ್ರೀನಿವಾಸರೆಡ್ಡಿರವರನ್ನು ಏಕವಚನದಲ್ಲಿ ವ್ಯಂಗ್ಯವಾಡಿದ್ದಾರೆ. ಇದರಿಂದ ಕುಪಿತಗೊಂಡ ಯುವಕ ಮಧುಸೂದನರೆಡ್ಡಿ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿರವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾನೂನು ರೀತಿ ಕ್ರಮ ಜರುಗಿಸುತ್ತಾರೆ. ಆದರೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬಾಗೇಪಲ್ಲಿ, ಗುಡಿಬಂಡೆ, ಚೇಳೂರಿನಲ್ಲಿ ಪ್ರತಿಭಟನೆ ಮಾಡಿರುವುದು ಯಾವ ಪುರುಷಾರ್ಥಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ.

‘ತಾಲ್ಲೂಕಿನಲ್ಲಿ ಅನೇಕ ಜೀವಂತ ಸಮಸ್ಯೆಗಳು ಇದೆ. ಸಮಸ್ಯೆಗಳನ್ನು ಬಗೆಹರಿಸಬೇಕಾದ ಎಸ್.ಎನ್.ಸುಬ್ಬಾರೆಡ್ಡಿ, ಕಾಂಗ್ರೆಸ್ ಮುಖಂಡರನ್ನು, ಕಾರ್ಯಕರ್ತರನ್ನು ಮುಂದೆ ಬಿಟ್ಟು, ಜನರನ್ನು ಭಯಭೀತಿಗೊಳಿಸಲು ಮುಂದಾಗಿದ್ದಾರೆ. ಸಂಘ-ಸಂಸ್ಥೆಗಳ ಪ್ರತಿಭಟನೆಗಳಿಗೆ ಪೊಲೀಸರು ಅವಕಾಶ ನೀಡುವುದಿಲ್ಲ. ಆದರೆ ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರು ಗಂಟೆಗಟ್ಟಲೆ ಅವಕಾಶ ನೀಡಿರುವುದು ಸಿಪಿಎಂ ಖಂಡಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.