ADVERTISEMENT

ಹಮಾಲಿಗಳಿಗೆ ಶ್ರಮಿಕ ಭವನ ನಿರ್ಮಿಸಿ; ಹಮಾಲಿ ಕಾರ್ಮಿಕರ ಫೆಡರೇಷನ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:55 IST
Last Updated 3 ಜೂನ್ 2020, 16:55 IST
ಬಾಗೇಪಲ್ಲಿ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಹಮಾಲಿ ಕಾರ್ಮಿಕರ ಫೆಡರೇಷನ್ ರಾಜ್ಯ ಸಮಿತಿ ಅಧ್ಯಕ್ಷ ಮಹಾಂತೇಶ್ ಮಾತನಾಡಿದರು
ಬಾಗೇಪಲ್ಲಿ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಹಮಾಲಿ ಕಾರ್ಮಿಕರ ಫೆಡರೇಷನ್ ರಾಜ್ಯ ಸಮಿತಿ ಅಧ್ಯಕ್ಷ ಮಹಾಂತೇಶ್ ಮಾತನಾಡಿದರು   

ಬಾಗೇಪಲ್ಲಿ: ತಾಲ್ಲೂಕಿನ ಹಮಾಲಿ ಕಾರ್ಮಿಕರಿಗೆ ಉಚಿತ ನಿವೇಶನ ಹಾಗೂ ದಿನಸಿ ಕಿಟ್ ವಿತರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಹಮಾಲಿ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹಮಾಲಿ ಕಾರ್ಮಿಕರ ಫೆಡರೇಷನ್ ಅಧ್ಯಕ್ಷ ಮಹಾಂತೇಶ್ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಹಮಾಲಿ ಕಾರ್ಮಿಕರಿದ್ದಾರೆ. ಇವರಿಗೆ ಯಾವುದೇ ಉದ್ಯೋಗ ಭದ್ರತೆಯಿಲ್ಲ. ಸರ್ಕಾರ ಹಮಾಲಿಗಳಿಗೆ ಉಚಿತ ನಿವೇಶನ ನೀಡಿ ಮನೆ ನಿರ್ಮಿಸಿಕೊಡಬೇಕು. ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 5 ಸಾವಿರ ಹಮಾಲಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ವಿಶ್ರಾಂತಿ ಪಡೆಯಲು ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಶ್ರಮಿಕ ಭವನ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ಖಂಡನೀಯ. ಲಾಕ್‌ಡೌನ್‌ನಿಂದಾಗಿ ಹಮಾಲಿಗಳಿಗೆ ತೊಂದರೆಯಾಗಿದೆ. ಅವರಿಗೆ ಮುಖಗವಸು, ಗ್ಲೌಸ್‌ಗಳನ್ನು ನೀಡಿಲ್ಲ ಎಂದು ದೂರಿದರು.

ADVERTISEMENT

ಫೆಡರೇಷನ್‌ನ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಬಿ. ಆಂಜನೇಯರೆಡ್ಡಿ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 30 ವರ್ಷಗಳಿಂದ ಹಮಾಲಿ ಕೆಲಸ ಮಾಡುತ್ತಿದ್ದಾರೆ. ಸ್ವಂತ ಮನೆ, ನಿವೇಶನ ಇಲ್ಲ. ಕೆಲವರು ಸಂಕಷ್ಟದಲ್ಲಿದ್ದಾರೆ. ಪಿಂಚಣಿ ವ್ಯವಸ್ಥೆ ಇಲ್ಲ. ಆಶ್ರಯ ಯೋಜನೆಯಲ್ಲಿ ಮನೆ ಕಲ್ಪಿಸಬೇಕು. ವೈದ್ಯಕೀಯ ವೆಚ್ಚ, ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಬೇಕು. ಎಪಿಎಂಸಿಯ ಒಂದು ನಿರ್ದೇಶಕರ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ತಾಲ್ಲೂಕು ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ, ಮುಖಂಡ ಮಹಮದ್ ಅಕ್ರಂ, ಹಮಾಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶಪ್ಪ, ಖಜಾಂಚಿ ಕೃಷ್ಣಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.