ADVERTISEMENT

ಪ್ರಜಾಪ್ರಭುತ್ವ ದಿನ; 15ರಂದು ಸೈಕಲ್ ರ‍್ಯಾಲಿ

ಜಿಲ್ಲಾಡಳಿತದ ಸಿಬ್ಬಂದಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು; ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 5:41 IST
Last Updated 14 ಸೆಪ್ಟೆಂಬರ್ 2025, 5:41 IST

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಸೆ.15 ರಂದು ನಡೆಯುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು.

15 ರಂದು ಬೆಳಿಗ್ಗೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಸೈಕಲ್ ರ‍್ಯಾಲಿ ಹಾಗೂ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 8ಕ್ಕೆ ಮೋಟರ್ ಬೈಕ್‌ಗಳ ರ‍್ಯಾಲಿಗೆ ಚಾಲನೆ ನೀಡಲಾಗುವುದು ಎಂದರು.

ADVERTISEMENT

ಚಿಕ್ಕಬಳ್ಳಾಪುರ  ಜಿಲ್ಲಾಧಿಕಾರಿ ಕಚೇರಿಯಿಂದ ಬೈಕ್ ರ‍್ಯಾಲಿ ಆರಂಭವಾಗಿ ಬೆಂಗಳೂರಿನ ವಿಧಾನಸೌಧದ ವರೆಗೆ ಸಾಗಲಿದೆ. ಅಲ್ಲಿ ನಡೆಯುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ  ಕಾರ್ಯಕ್ರಮಕ್ಕೆ ಸೇರ್ಪಡೆ ಆಗಲಿದೆ. ಸೈಕಲ್  ರ‍್ಯಾಲಿಯು ನಗರದಲ್ಲಿ ನಡೆಯಲಿದೆ ಎಂದರು.

ಸೈಕಲ್ ರ‍್ಯಾಲಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಆನ್‌ಲೈನ್ ಮೂಲಕ  ನೋಂದಣಿ ಮಾಡಿಕೊಳ್ಳಬೇಕು. ರ‍್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಟೀ ಶರ್ಟ್, ಕ್ಯಾಪ್ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. ನಗರದ ಜಿಲ್ಲಾಡಳಿತ ಭವನದಿಂದ ಬೆಳಿಗ್ಗೆ 8.30ಕ್ಕೆ ರ‍್ಯಾಲಿ ಪ್ರಾರಂಭಗೊಂಡು  ಶಿಡ್ಲಘಟ್ಟ ವೃತ್ತದಿಂದ ಕನ್ನಡ ಭವನವರೆಗೆ ಸಾಗಿ ಅಲ್ಲಿ ತಿರುವು ಪಡೆದು ಬಿಬಿ ರಸ್ತೆ ಮೂಲಕ ಅಂಬೇಡ್ಕರ್ ಭವನ ತಲುಪಿ ನಂತರ ಶಿಡ್ಲಘಟ್ಟ ವೃತ್ತ ಮುಖಾಂತರ ಮತ್ತೆ ಜಿಲ್ಲಾಡಳಿತ ಭವನಕ್ಕೆ ಬರಲಿದೆ ಎಂದರು. 

 ವೇದಿಕೆ ಕಾರ್ಯಕ್ರಮದಲ್ಲಿ 1000 ಕೂ ಹೆಚ್ಚು ಜನರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು, ಲಘು ಉಪಹಾರ, ಆಸನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಅರೋಗ್ಯ ಸೇವೆ, ಆಂಬುಲೆನ್ಸ್ ನಿಲುಗಡೆ, ಸಂಚಾರ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಮೂಲ ಸೌರ್ಕಯಗಳನ್ನು ಒದಗಿಸಬೇಕು. ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸೂಚಿಸಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ನೆಡೆಯುವ ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕ‌ರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಜಿಲ್ಲಾ ಅರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಹೇಶ್ ಕುಮಾರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.