ADVERTISEMENT

ಬಾಣಂತಿಯರ ಸಾವು | ಕೇಂದ್ರ ತಂಡ ಕಳುಹಿಸಿ ಪರಿಶೀಲನೆ ನಡೆಸಿ: ಸಂಸದ ಸುಧಾಕರ್ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 15:13 IST
Last Updated 3 ಜನವರಿ 2025, 15:13 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡ ಕಳುಹಿಸಿ ಪರಿಶೀಲಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಸಚಿವರಿಗೆ ಪತ್ರ ಬರೆದಿದ್ದಾರೆ. ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿ ಆಗುತ್ತಿದೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಪ್ರಕರಣ ವರದಿಯಾಗಿದೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ. ಹೆಚ್ಚಿನವು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದರಲ್ಲಿ ಲಿಂಜರ್ಸ್‌ ಲ್ಯಾಕ್ಟೇಟ್‌ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಆದ್ದರಿಂದ ಈ ಕುರಿತು ಸಮಗ್ರ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ ತಾಯಂದಿರ ಮರಣಕ್ಕೆ ಕಾರಣಗಳನ್ನು ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ ಎಂದಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡ ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರಕ್ಕೆ ಶಿಫಾರಸು ಮಾಡಬೇಕಿದೆ. ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಕೋರಿದ್ದಾರೆ.

ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಇದರಿಂದ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.