ಚಿಕ್ಕಬಳ್ಳಾಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಗೆಲುವು ಸಾಧಿಸುವ ದಿಕ್ಕಿನಲ್ಲಿ ಪಕ್ಷವನ್ನು ಸಂಘಟಿಸಲಾಗುವುದು. ಬೂತ್ ಮಟ್ಟದಿಂದ ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಜಿ.ಎಸ್. ರಘುನಾಥ ರೆಡ್ಡಿ ತಿಳಿಸಿದರು.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಯುವ ಘಟಕ ನೂತನವಾಗಿ ರಚನೆ ಆಗಿದೆ. ಶಾಸಕ ಎಂ. ಕೃಷ್ಣಾರೆಡ್ಡಿ, ಮಾಜಿ ಶಾಸಕ ಬಚ್ಚೇಗೌಡ, ಮುಖಂಡರಾದ ಮೇಲೂರು ರವಿಕುಮಾರ್, ನರಸಿಂಹಮೂರ್ತಿ, ಡಿ.ಜೆ. ನಾಗರಾಜ ರೆಡ್ಡಿ, ಕೆ.ಎಂ. ಮುನೇಗೌಡ ಅವರ ಮಾರ್ಗದರ್ಶನದಲ್ಲಿ ಸಂಘಟಿಸಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕಿನಲ್ಲಿ ಪ್ರವಾಸ ಮಾಡಲಾಗುವುದು. ನಿಷ್ಠಾವಂತ ಯುವ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು. ಮತ್ತೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿ ಇದೆ. ಶೀಘ್ರದಲ್ಲಿಯೇ ತಾಲ್ಲೂಕು ಯುವ ಘಟಕಗಳ ರಚನೆಯೂ ಆಗಲಿದೆ ಎಂದು ಹೇಳಿದರು.
ಉಪಾಧ್ಯಕ್ಷ ವರುಣ್ ಮಾತನಾಡಿ, ಜೆಡಿಎಸ್ ಯುವ ಘಟಕವು ಕುಮಾರಸ್ವಾಮಿ ಅವರ ಕೈ ಬಲಪಡಿಸುತ್ತದೆ. ಪಂಚರತ್ನ ಕಾರ್ಯಕ್ರಮವನ್ನು ಹಳ್ಳಿಗಳಲ್ಲಿ ರೂಪಿಸುತ್ತೇವೆ ಎಂದು ಹೇಳಿದರು.
ಮಂಜುನಾಥ್ ಮಾತನಾಡಿ, ಕುಮಾರಸ್ವಾಮಿ ಮತ್ತು ದೇವೇಗೌಡ ಅವರ ಅವಧಿಯಲ್ಲಿ ಜಾರಿಯಾದ ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ರಾಜ್ಯ, ಕೇಂದ್ರದ ದುರಾಡಳಿತದ ಬಗ್ಗೆಯೂ ತಿಳಿಸುತ್ತೇವೆ ಎಂದರು.
ಕಾರ್ಯಾಧ್ಯಕ್ಷ ರಾಮಚಂದ್ರ ರೆಡ್ಡಿ, ಶ್ರೀನಿವಾಸ ಯಾದವ್, ಮುನಿಯಪ್ಪ, ಗಂಗನಾರಾಯಣ, ಲೋಕೇಶ್ ಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.