ADVERTISEMENT

ಕೆಮ್ಮಣ್ಣಗುಂಡಿ, ನಂದಿ ಗಿರಿಧಾಮ ಹಸ್ತಾಂತರಿಸದಿರಲು ತೀರ್ಮಾನ

ತೋಟಗಾರಿಕೆ ಸಚಿವ ನಾರಾಯಣಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 18:00 IST
Last Updated 14 ಅಕ್ಟೋಬರ್ 2020, 18:00 IST
ನಾರಾಯಣಗೌಡ
ನಾರಾಯಣಗೌಡ   

ಚಿಕ್ಕಬಳ್ಳಾಪುರ: ‘ಚಿಕ್ಕಮಗಳೂರಿನ ಕೆಮ್ಮಣ್ಣಗುಂಡಿ ಮತ್ತು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮವನ್ನು ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲು ತೀರ್ಮಾನ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಅವರು ಸಹಕಾರ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ಹೇಳಿದರು.

ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಮ್ಮಣ್ಣಗುಂಡಿ ಮತ್ತು ನಂದಿ ಗಿರಿಧಾಮಗಳ ನಿರ್ವಹಣೆಯನ್ನು ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಚರ್ಚಿಸಲಾಗಿದೆ’ ಎಂದು ತಿಳಿಸಿದರು.

‘ಆದರೆ, ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಿದರೆ ಗಿರಿಧಾಮದ ಪರಿಸರ ವಾಣಿಜ್ಯೀಕರಣಗೊಂಡು ವಾತಾವರಣ ಕೆಡುತ್ತದೆ. ಆದ್ದರಿಂದ ಹಸ್ತಾಂತರಿಸಬಾರದು ಎಂದು ಈ ಭಾಗದ ರೈತ ಸಮುದಾಯ, ನೂರಾರು ಸಂಘ ಸಂಸ್ಥೆಗಳು ಒತ್ತಾಯಿಸಿವೆ. ಇದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು’ ಎಂದರು.

ADVERTISEMENT

‘ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ನಂದಿ ಗಿರಿಧಾಮದಲ್ಲಿರುವ ತೋಟಗಾರಿಕೆ ಇಲಾಖೆಗೆ ಸೇರಿದ ವಸತಿ ಗೃಹಗಳನ್ನು ನವೀಕರಿಸುವ ಜತೆಗೆ ಈ ಭಾಗದ ಜನರ ಸಲಹೆ ಪಡೆದು ಮೂಲಸ್ವರೂಪಕ್ಕೆ ತರದಂತೆ ಗಿರಿಧಾಮವನ್ನು ಅಭಿವೃದ್ಧಿಪಡಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.