ಚಿಕ್ಕಬಳ್ಳಾಪುರ: ‘ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಜಾರಿಗೆ ತರುವ ಪ್ರತಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತೆ ಅಧಿಕಾರಿಗಳು ಶ್ರಮಿಸಿ, ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹೇಳಿದರು.
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಮತ್ತು ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣೆ ಹಾಗೂ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ನರೇಗಾ ಯೋಜನೆ ಅಡಿ ಕೈಗೆತ್ತಿಕೊಂಡಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.
‘ಮಾತೃವಂದನಾ ಯೋಜನೆ ಅಡಿ ಸಿಗುವ ಸವಲತ್ತುಗಳನ್ನು ಎಲ್ಲಾ ಗರ್ಭಿಣಿರಿಗೂ ಕಡ್ಡಾಯವಾಗಿ ತಲುಪಬೇಕು. ಈ ಮಳೆಗಾಲದಲ್ಲಿ ಶಾಲೆಗಳ ಆವರಣಗಳಲ್ಲಿ ಸಸಿಗಳನ್ನು ನೆಡುವ ಮತ್ತು ಪೌಷ್ಠಿಕ ಆಹಾರಕ್ಕೆ ಸಂಬಂಧಿಸಿದ ಸೊಪ್ಪು ತರಕಾರಿಗಳ ಕೈತೋಟವನ್ನು ಬೆಳೆಸಲು ಪ್ರೋತ್ಸಾಹಿಸುವ ಕೆಲಸಗಳಾಗಬೇಕು’ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ ಮತ್ತು ಶಿಶು ಅಭಿವೃದ್ಧಿ ಯೋಜನೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.