ADVERTISEMENT

ಬೆಳೆ ಹಾನಿ ಪರಿಹಾರ ನೀಡಲು ಆಗ್ರಹ, ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 6:46 IST
Last Updated 1 ಡಿಸೆಂಬರ್ 2021, 6:46 IST
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಡಿ.ಎ.ದಿವಾಕರ್ ಅವರಿಗೆ ಮನವಿ ನೀಡಿದರು
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಡಿ.ಎ.ದಿವಾಕರ್ ಅವರಿಗೆ ಮನವಿ ನೀಡಿದರು   

ಬಾಗೇಪಲ್ಲಿ: ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ₹20 ಸಾವಿರ, ಮನೆ ಕಳೆದುಕೊಂಡವರಿಗೆ ₹30 ಸಾವಿರ ಹಾಗೂ ದೆಹಲಿಯ ರೈತರ ಹೋರಾಟದಲ್ಲಿ ಹುತಾತ್ಮರಾದ ರೈತರಿಗೆ ₹50 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ನಂಜುಂಡಸ್ವಾಮಿ ಬಣ)ಯ ತಾಲ್ಲೂಕು ಮುಖಂಡರು ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಡಾ.ಎಚ್.ಎನ್.ವೃತ್ತದಿಂದ ಹೊರಟ ಪ್ರತಿಭಟನಾಕಾರರು ಮುಖ್ಯರಸ್ತೆಯಲ್ಲಿ ಸಂಚರಿಸಿ, ಮಳೆಯಿಂದ ಹಾನಿಗೊಳಗಾದ ರೈತರಿಗೆ, ಮನೆ ಹಾನಿಯಾದವರಿಗೆ ಪರಿಹಾರ ನೀಡದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರೈತ ಸಂಘ ಹಾಗೂ ಹಸಿರು ಸೇನೆಯ ಬಿ.ಜಿ.ಹಳ್ಳಿನಾರಾಯಣ ಸ್ವಾಮಿ ಮಾತನಾಡಿ, ತಾಲ್ಲೂಕಿನಲ್ಲಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನೆಲ ಕಚ್ಚಿದೆ. ರೈತ ಕುಟುಂಬ ಸಂಕಷ್ಟದಲ್ಲಿ ಇದೆ. ಇದುವರೆಗೂ ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಮಾಹಿತಿ ನೀಡಿಲ್ಲ. ಕೂಡಲೇ ಹಿರಿಯ ಅಧಿಕಾರಿಗಳು ಗಮನ ಹರಿಸಿ ರೈತರಿಂದ ಮಾಹಿತಿ ಸಂಗ್ರಹಿಸಬೇಕು. ಕೂಡಲೇ ಬೆಳೆ ನಷ್ಟ ಹಾಗೂ ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಅಧ್ಯಕ್ಷ ಶ್ರೀನಿವಾಸಲು ಮಾತನಾಡಿ, ತಾಲ್ಲೂಕಿನಲ್ಲಿ ಬೆಳೆ ನಷ್ಟ ರೈತರಿಗೆ ಪ್ರತಿ ಎಕರೆಗೆ ₹20 ಸಾವಿರ ನಷ್ಟ ಪರಿಹಾರ ನೀಡಬೇಕು. ಜಮೀನು ಹಾಳಾದವರಿಗೆ ₹30 ಸಾವಿರ ವಿತರಣೆ ಮಾಡಬೇಕು. ದೆಹಲಿಯಲ್ಲಿ ಹೋರಾಟ ಮಾಡಿ ಹುತಾತ್ಮರಾದ ರೈತರ ಕುಟುಂಬಗಳಿಗೆ ₹50 ಲಕ್ಷ ಪರಿಹಾರ ನೀಡಬೇಕು. ರೈತರಿಗೆ ಬೆಳೆ ವಿಮೆ ನೀಡಬೇಕು. ಶಾಲಾ ಶುಲ್ಕಗಳನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಡಿ.ಎ.ದಿವಾಕರ್ ಪ್ರತಿಕ್ರಿಯಿಸಿ, ಈಗಾಗಲೇ ತಾಲ್ಲೂಕಿನಲ್ಲಿ 150ಕ್ಕೂ ಹೆಚ್ಚು ಮನೆ ಹಾನಿಯಾದವರ ಪಟ್ಟಿ ಸಿದ್ಧಪಡಿಸಲಾಗಿದೆ. ಬೆಳೆ ನಷ್ಟದ ಬಗ್ಗೆ ಕೃಷಿ, ತೋಟಗಾರಿಕೆ ಅಧಿಕಾರಿಗಳು ಸಮಗ್ರ ಮಾಹಿತಿ ನೀಡುವಂತೆ ನವೆಂಬರ್ 30ರ ಒಳಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಬೆಳೆ ನಷ್ಟ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ರೈತ ಸಂಘದ ಗೌರವಾಧ್ಯಕ್ಷ ಎಸ್.ನಾರಾಯಣಪ್ಪ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಕಾರ್ಯಾಧ್ಯಕ್ಷ ಎಚ್.ಎನ್.ಸುಬ್ಬಿರೆಡ್ಡಿ, ಉಪಾಧ್ಯಕ್ಷ ಎನ್.ಶ್ರೀನಿವಾಸ್, ಕಾರ್ಯದರ್ಶಿ ಜಾಕೀರ್ ಅಹಮದ್, ಖಜಾಂಚಿ ಕೆ.ಬೈರಾರೆಡ್ಡಿ, ಸಂಚಾಲಕ ಸೂರ್ಯನಾರಾಯಣ, ಜಿ.ಎಲ್.ನರಸಿಂಹಯ್ಯ, ಕದಿರಪ್ಪ, ವಿ.ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.