ADVERTISEMENT

ಕರ್ತವ್ಯ ನಿರ್ಲಕ್ಷಿಸಿದರೆ ಶಿಸ್ತುಕ್ರಮ: ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ನೋಡೆಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 15:46 IST
Last Updated 1 ಸೆಪ್ಟೆಂಬರ್ 2020, 15:46 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ನಗರದಲ್ಲಿ ದಿನಕ್ಕೆ 50 ಮನೆಗಳಿಗೆ ಖುದ್ದಾಗಿ ನೋಡೆಲ್ ಅಧಿಕಾರಿಗಳು ಭೇಟಿ ನೀಡಿ ಮನೆಯ ಸದಸ್ಯರ ದಿನನಿತ್ಯದ ಆರೋಗ್ಯದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಕೋವಿಡ್‌ನಿಂದ ಯಾವುದೇ ವ್ಯಕ್ತಿ ಸಾವನ್ನಪ್ಪಿದರೆ ಅಲ್ಲಿನ ಅಧಿಕಾರಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಅವರ ವಿರುದ್ದ ಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಆರ್ .ಲತಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆಯ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೊರೊನಾ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು.

‘ನಗರದಲ್ಲಿ ಕೊರೊನಾ ಪ್ರಕರಣಗಳು ಇರುವುದರಿಂದ ಎಲ್ಲಾ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು. ಅತೀ ಮುಖ್ಯವಾಗಿ ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಸ್ವಚ್ಚತೆಯನ್ನು ಕಾಪಾಡಬೇಕು. ಪ್ರತಿ ಮನೆಯಲ್ಲಿ ತ್ಯಾಜ್ಯವನ್ನು ವಿಂಗಡಿಸಿ ನೀಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ನಗರದಲ್ಲಿ ನೋಡೆಲ್ ಅಧಿಕಾರಿಗಳು ದಿನ ಬಿಟ್ಟು ದಿನ 50 ಮನೆಗಳಿಗೆ ಭೇಟಿ ನೀಡಿ ಆ ಸದಸ್ಯರ ಯೋಗ ಕ್ಷೇಮವನ್ನು ವಿಚಾರಿಸಬೇಕು. ಅವರಲ್ಲಿ ಕೊರೊನಾ ಲಕ್ಷಣವಿದ್ದಲ್ಲಿ ಕೋಡಲೆ ಚಿಕಿತ್ಸೆಗೆ ಒಳಪಡಿಸಿ, ಅವರಿಗೆ ಧೈರ್ಯವನ್ನು ತುಂಬುವಂತಹ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೂ ಜನರು ಪರೀಕ್ಷೆಗೆ ಒಳಗಾಗದೆ ಮನೆಯಲ್ಲಿಯೇ ಮಾತ್ರೆಗಳನ್ನು ಸೇವಿಸಿ ಸುಮ್ಮನಾಗುತ್ತಾರೆ. ತೀರಾ ಆರೋಗ್ಯದ ಸ್ಥಿತಿ ಹದಗೆಟ್ಟಾಗ ಆಸ್ಪತ್ರೆ ಬರುತ್ತಾರೆ. ಚಿಕಿತ್ಸೆ ಫಲಕಾರಿಯಾಗದೆ ಸಾಯುತ್ತಾರೆ. ಆದ್ದರಿಂದ ಪ್ರತಿಯೊಂದು ಮನೆಗಳಲ್ಲಿನ 60 ವರ್ಷ ದಾಟಿದ ಹಿರಿಯ ನಾಗರಿಕರನ್ನು ಅತೀ ಸೂಕ್ಷ್ಮವಾಗಿ ನೋಡಿಕೊಳ್ಳಬೇಕಿದೆ’ ಎಂದರು.

‘ನಗರದಲ್ಲಿ ವಾರಕ್ಕೆ ಎರಡು ಬಾರಿ ಎಲ್ಲಿ ಯಾವಾಗ ಬೇಕಾದರೂ ಭೇಟಿ ನೀಡುತ್ತೇನೆ. ಅಧಿಕಾರಿಗಳು ಎಚ್ಚರಿಕೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು’ ಎಂದು ಸಭೆಯಲ್ಲಿದ್ದ ನೋಡೆಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಭಾಸ್ಕರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆ ಪೌರಾಯುಕ್ತ ಲೋಹಿತ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.