ADVERTISEMENT

ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 2:22 IST
Last Updated 23 ಜನವರಿ 2021, 2:22 IST
ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಆರ್‌ಟಿಒ ಅಧಿಕಾರಿಗಳು
ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಆರ್‌ಟಿಒ ಅಧಿಕಾರಿಗಳು   

ಚಿಕ್ಕಬಳ್ಳಾಪುರ: ನಗರದ ಹೊರವಲಯದಲ್ಲಿನ ಚಿತ್ರಾವತಿ ಬಳಿಯಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಇಲಾಖೆ ವತಿಯಿಂದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2021ನ್ನು ಶುಕ್ರವಾರ ಆಚರಿಸಲಾಯಿತು.

‘ರಸ್ತೆ ಸುರಕ್ಷತೆ-ಜೀವದ ರಕ್ಷೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್.ಡಿ.ಮಂಜುನಾಥ್ ಚಾಲನೆ ನೀಡಿ ಮಾತನಾಡಿದರು.

ಸಾರಿಗೆ ಇಲಾಖೆ ಪ್ರತಿ ವರ್ಷವೂ ರಸ್ತೆ ಸುರಕ್ಷತೆಯ ಬಗ್ಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದ್ದು ಪ್ರಸಕ್ತ ಸಾಲಿನಲ್ಲೂ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಸ್ತೆ ಸುರಕ್ಷಾ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ADVERTISEMENT

ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ನಮ್ಮ ಮನೆಯಲ್ಲಿ ನಮಗಾಗಿ ಕಾಯುತ್ತಿರುವ ನಮ್ಮ ಕುಟುಂಬದ ಅವಲಂಭಿತರು ಸುರಕ್ಷತೆಯಿಂದ ಬರಲೆಂದು ಕಾಯುತ್ತಿರುತ್ತಾರೆ. ಹಾಗಾಗಿ ವಾಹನ ಸಂಚರಿಸುವಾಗ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಹಿರಿಯ ಮೋಟಾರು ತನಿಖಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಚಾಲಕರು ಲಘು ಮೋಟಾರು ವಾಹನದಲ್ಲಿ ತೆರಳುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಬೇಕು. ವಾಹನ ಸವಾರಿ ಮಾಡುವಾಗ ಯಾವುದೇ ಮೊಬೈಲ್ ಬಳಕೆ ಮಾಡಬಾರದು. ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅದು ಕೂಡ ಅಪರಾಧವಾಗಲಿದೆ. ಈ ಎಲ್ಲಾ ಸುರಕ್ಷತೆಗಳ ಬಗ್ಗೆ ಸವಾರರು ಜಾಗೃತರಾಗಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೋಟಾರು ನಿರೀಕ್ಷಕ ನಾಗರಾಜು ಎಸ್.ನಾಯಕ್, ದಿಲೀಪ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.