ಚಿಕ್ಕಬಳ್ಳಾಪುರ: ‘ಜಿಲ್ಲೆಯ ರೈತರು ಶ್ರಮಜೀವಿಗಳು. ಗುಣಮಟ್ಟದ ಹಣ್ಣು, ತರಕಾರಿ, ರೇಷ್ಮೆ, ಹಾಲನ್ನು ಉತ್ಪಾದಿಸುತ್ತಿದ್ದಾರೆ. ನಮ್ಮ ಸರ್ಕಾರ ರೈತರ ಬೆವರಿಗೆ ಬೆಲೆ ಕೊಡಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ‘ಚಿಕ್ಕಬಳ್ಳಾಪುರ ಉತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಮತ್ತು ಸಿಎನ್ಆರ್ ರಾವ್ ಈ ಜಿಲ್ಲೆಯವರು. ಒಂದೇ ಜಿಲ್ಲೆಯ ಇಬ್ಬರು ‘ಭಾರತ ರತ್ನ’ಕ್ಕೆ ಭಾಜನರಾಗಿದ್ದಾರೆ. ಜಿಲ್ಲೆಯು ಧಾರ್ಮಿಕ, ಪ್ರವಾಸೋದ್ಯಮ, ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿ ಇದೆ ಎಂದು ಹೇಳಿದರು.
‘ಚಿಕ್ಕಬಳ್ಳಾಪುರವು ಫಲಪುಷ್ಪಗಳ ಗಿರಿಧಾಮಗಳ ನಾಡು’ ಎನ್ನುವ ಹೆಸರು ಅನಾವರಣಗೊಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಇದನ್ನು ಅಧಿಕೃತಗೊಳಿಸುತ್ತೇವೆ ಎಂದು ಹೇಳಿದರು.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಚಿಕ್ಕಬಳ್ಳಾಪುರ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಜಿಲ್ಲೆಯ ಜನರು ಒಳ್ಳೆಯ ಕೃಷಿಕರು. ಬೆಂಗಳೂರು ನಗರಕ್ಕೆ ಹಾಲು, ಹಣ್ಣು ತರಕಾರಿ ಸರಬರಾಜು ಮಾಡುವ ಮೂಲಕ ಬೆಂಗಳೂರನ್ನು ರಕ್ಷಿಸುತ್ತಿದ್ದಾರೆ’ ಎಂದು ಹೇಳಿದರು.
ಅಧ್ಯಕ್ಷತೆವಹಿಸಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ‘ಚಿಕ್ಕಬಳ್ಳಾಪುರ ಉತ್ಸವ’ದ ಮೂಲಕ ರಾಜ್ಯದ ಜನರು ಈ ಕಡೆ ನೋಡುತ್ತಿದ್ದಾರೆ ಎಂದು
ಹೇಳಿದರು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮಾತನಾಡಿದರು. ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿ.ಪಂ ಸಿಇಒ ಪಿ. ಶಿವಶಂಕರ್, ಎಸ್ಪಿ ಡಿ.ಎಲ್. ನಾಗೇಶ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ಬಿಎಂಟಿಸಿ ಉಪಾಧ್ಯಕ್ಷ ಕೆ.ವಿ. ನವೀನ್ ಕಿರಣ್, ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ ಬಾಬು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜಿ.ಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.