ಶಿಡ್ಲಘಟ್ಟ: ‘ನಮ್ಮ ಭಾಗದಲ್ಲಿ ನದಿ ನಾಲೆಗಳಿರದ ಕಾರಣ ನಾವುಗಳು ಹಿಂದಿನಿಂದಲೂ ನಂಬಿರುವುದು ಆಗಸದಿಂದ ಬೀಳುವ ಮಳೆಯನ್ನು. ಅದನ್ನು ಹಿಡಿದಿಡಲೆಂದೇ ಹಿಂದಿನವರು ಕೆರೆಗಳನ್ನು ಕಟ್ಟಿಸಿದ್ದಾರೆ. ಅವುಗಳನ್ನು ಉಳಿಸಿಕೊಂಡು, ಮಳೆ ನೀರು ಹಿಡಿದಿಟ್ಟುಕೊಳ್ಳುವುದು ಅತ್ಯಂತ ಪ್ರಮುಖವಾದುದು’ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಕೊತ್ತನೂರು ಕೆರೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆ ಸಂಜೀವಿನಿ ಕಾರ್ಯಕ್ರಮದ ಅಡಿಯಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಕೆರೆಗಳಲ್ಲಿ ನೀರಿಲ್ಲದೆ ಅಂತರ್ಜಲ ಮಟ್ಟ ಕುಸಿದು ಕೃಷಿ ಕ್ಷೇತ್ರಕ್ಕೆ ಅಲ್ಲದೆ ಕುಡಿಯುವ ನೀರಿಗೂ ತೀವ್ರ ಅಭಾವವಾಗಿದೆ. ಇಂತಹ ಸಮಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕೆರೆಗಳಲ್ಲಿ ಹೂಳೆತ್ತುವ ಯೋಜನೆ ವರದಾನವಾಗಿದೆ. ಇದರಿಂದ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿ ಅಂತರ್ಜಲಮಟ್ಟ ಹೆಚ್ಚಲು ಸಹಕಾರಿಯಾಗಲಿದೆ’ ಎಂದು ಹೇಳಿದರು.
ಜಿಲ್ಲಾ ಯೋಜನಾ ನಿರ್ದೇಶಕ ಬಿ.ವಸಂತ್ ಮಾತನಾಡಿ, ‘4 ವರ್ಷಗಳಿಂದ ಕೆರೆಗಳ ಪುನಶ್ಚೇತನ ಕಾರ್ಯಕ್ರಮ ನಡೆಯುತ್ತಿದೆ. ಕಳೆದ ಮಳೆಗಾಲದಲ್ಲಿ ಪುನಶ್ಚೇತನಗೊಂಡ ಎಲ್ಲ ಕೆರೆಗಳು ತುಂಬಿವೆ. ಇದರಿಂದಾಗಿ ಬತ್ತಿ ಹೋಗಿದ್ದ ಅನೇಕ ಕೊಳವೆ ಬಾವಿಗಳೂ
ಮರುಜೀವ ಪಡೆದುಕೊಂಡಿವೆ. ರೈತರು ಕೃಷಿ ಕಾರ್ಯ ಪ್ರಾರಂಭಿಸಿದ್ದಾರೆ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಸಮಸ್ಯೆಯೂ ನಿವಾರಣೆಯಾಗಿದೆ. ಕೊತ್ತನೂರು ಕೆರೆಯ ಪುನಶ್ಚೇತನದಿಂದ ಈ ಭಾಗದ ಜನ ಜಾನುವಾರುಗಳಿಗೂ ಸಾಕಷ್ಟು ಅನುಕೂಲವಾಗಲಿದೆ’ ಎಂದರು.
ತಹಶೀಲ್ದಾರ್ ಬಿ.ಎಸ್. ರಾಜೀವ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪಿಡಿಒ ಅಶ್ವತ್ಥಪ್ಪ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಸುರೇಶ್, ವೆಂಕಟಸ್ವಾಮಿರಡ್ಡಿ, ಸುಭ್ರಮಣಿ, ಕೆರೆ ಸಮಿತಿ ಅಧ್ಯಕ್ಷ ಪಂಚಾಕ್ಷರಿ ರೆಡ್ಡಿ, ಪ್ರಾದೇಶಿಕ ನಿರ್ದೇಶಕ ಸೀನಪ್ಪ, ದೇವರಾಜು, ಚಂದ್ರಪ್ಪ, ದೇವರಾಜು, ಜ್ಞಾನೇಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.