ADVERTISEMENT

ಬೇಡಿಕೆಗಳ ಈಡೇರಿಕೆಗೆ ನೌಕರರ ಆಗ್ರಹ: ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

ಕನಿಷ್ಠ ವೇತನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 10:34 IST
Last Updated 18 ಅಕ್ಟೋಬರ್ 2019, 10:34 IST
ಜಿಲ್ಲಾಡಳಿತ ಭವನದ ಎದುರು ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಎದುರು ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕನಿಷ್ಠ ವೇತನ ನೀಡುವ ಜತೆಗೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ಕಾರ್ಯಕರ್ತರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿದ್ಧಗಂಗಪ್ಪ, ‘ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ‘ಎಲೆಕ್ಟ್ರಾನಿಕ್ ಫಂಡ್ ಮ್ಯಾನೇಜ್‌ಮೆಂಟ್ ಸಿಸ್ಟಂ’ (ಇಎಫ್‌ಎಂಎಸ್‌) ಮೂಲಕ ವೇತನವನ್ನು 5ನೇ ತಾರೀಖಿನ ಒಳಗೆ ನೆರವಾಗಿ ನೌಕರರ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ನಿವೃತ್ತ ನೌಕರರಿಗೆ ಉಪಧಾನ ನೀಡಲು ಕೂಡಲೇ ಕ್ರಮಕೈಗೊಳ್ಳಬೇಕು. ಕರ ವಸೂಲಿಗಾರರಿಗೆ 2008 ರಿಂದ ಬಡ್ತಿ ನೀಡಿಲ್ಲ. ಇದರಿಂದ ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿ ಅಂಚಿನಲ್ಲಿದ್ದವರಿಗೆ ಕೂಡಲೇ ಗ್ರೇಡ್ 2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಕೂಡಲೇ ಅಂತಿಮ ಪಟ್ಟಿ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಗ್ರಾಮ ಪಂಚಾಯಿತಿ ನೌಕರರಿಗೆ ಪಿಂಚಣಿ, ವೈದ್ಯಕೀಯ ವೆಚ್ಚ, ಭವಿಷ್ಯ ನಿಧಿ ಸಿಗುವಂತೆ ಆದೇಶಿಸಬೇಕು. ನಗರಾಭಿವೃದ್ಧಿ ಇಲಾಖೆಯ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಸೇವಾ ನಿಯಮಾವಳಿ ರಚಿಸುವುದು ಪ್ರಗತಿಯಲ್ಲಿದ್ದು, ಅದನ್ನು ಪೂರ್ಣಗೊಳಿಸಲು ಆದೇಶ ಹೊರಡಿಸಬೇಕು. 2011ರ ಜನಗಣತಿ ಆಧಾರದಲ್ಲಿ ಗ್ರೇಡ್‌ –2 ಗ್ರಾಮ ಪಂಚಾಯಿತಿಗಳನ್ನು ಗ್ರೇಡ್ –1ಕ್ಕೆ ಮೇಲ್ದರ್ಜೆಗೇರಿಸಬೇಕು’ ಎಂದು ಹೇಳಿದರು.

‘ಕಳೆದ ಮಾರ್ಚ್ 1ರಿಂದ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಈವರೆಗೆ ಜಿಲ್ಲೆಯ ಕೆಲ ಪಂಚಾಯಿತಿಗಳಲ್ಲಿ ನೌಕರರಿಗೆ ಕನಿಷ್ಠ ವೇತನ ನೀಡಿಲ್ಲ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೂ ಸಾಕಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಕನಿಷ್ಠ ವೇತನ ನೀಡಲು ಹಿಂದುಮುಂದು ನೋಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜಿಲ್ಲೆಯಲ್ಲಿ ಗುರುತಿಸಿದ ಹೊಸ ಗ್ರೇಡ್ –1 51 ಗ್ರಾಮ ಪಂಚಾಯಿತಿಗಳನ್ನು ಅನುಮೋದನೆ ನೀಡಿ ಪ್ರಕಟಿಸಬೇಕು. ಇದರಿಂದ ಗ್ರೇಡ್ 2 ಮತ್ತು ಲೆಕ್ಕ ಸಹಾಯಕರ ಹುದ್ದೆಗಳು ಸೃಜಿಸಬಹುದಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಪದೋನ್ನತಿಗೆ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನಾಗರಾಜು, ಖಜಾಂಚಿ ಬಿ.ಎನ್.ಮುನಿಕೃಷ್ಣಪ್ಪ, ಮುಖಂಡರಾದ ಗೋವಿಂದರೆಡ್ಡಿ, ಕೆ.ಎಂ.ನಾರಾಯಣಸ್ವಾಮಿ, ಸುದರ್ಶನ್, ಕೃಷ್ಣಪ್ಪ, ಜನಾರ್ದನ್, ಶಶಿಕುಮಾರ್, ಬಾಬಾಜಾನ್, ನಾಗರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.