ADVERTISEMENT

ಅಂತರ್ಜಲ ವೃದ್ಧಿಗೆ ರೈತರು ಕೈಜೋಡಿಸಿ: ಕೆ.ಎಸ್ ಈಶ್ವರಪ್ಪ

ಜಿಲ್ಲೆಯಲ್ಲಿ ‘ಅಂತರ್ಜಲ ಚೇತನ’ ಯೋಜನೆಗೆ ಚಾಲನೆ ನೀಡಿದ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 19 ಮೇ 2020, 13:32 IST
Last Updated 19 ಮೇ 2020, 13:32 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಗವಿಗಾನಹಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಅಂತರ್ಜಲ ಚೇತನ ಯೋಜನೆ ಹಾಗೂ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಗವಿಗಾನಹಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಅಂತರ್ಜಲ ಚೇತನ ಯೋಜನೆ ಹಾಗೂ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.   

ಚಿಕ್ಕಬಳ್ಳಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯ ’ಅಂತರ್ಜಲ ಚೇತನ‘ ಯೋಜನೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಾಗೂ ಎಫ್.ಇ.ಎಸ್ ಸಂಸ್ಥೆ ಸಹಯೋಗದಲ್ಲಿ ಕೈಗೆತ್ತಿಕೊಂಡ ಅಂತರ್ಜಲ ವೃದ್ಧಿ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಚಾಲನೆ ನೀಡಿದರು.

ತಾಲ್ಲೂಕಿನ ಗವಿಗಾನಹಳ್ಳಿಯಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಚಿವರು, ಬಳಿಕ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಂತರ್ಜಲ ಚೇತನ ಯೋಜನೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರಪ್ಪ, ’ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಇದೇ ಮೊದಲ ಬಾರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಭಿಯಾನದ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ರೈತರು ಬದು ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕೈಜೋಡಿಸಬೇಕು‘ ಎಂದು ಹೇಳಿದರು.

ADVERTISEMENT

’ಅಂತರ್ಜಲ ಚೇತನ ಯೋಜನೆಯಿಂದ ಅಂತರ್ಜಲ ವೃದ್ಧಿಸುವ ಜತೆಗೆ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಗಳು ಸಹ ದೊರೆಯಲಿವೆ. ನರೇಗಾ ಕೂಲಿ ಹಣವನ್ನು ಪ್ರತಿ ದಿನಕ್ಕೆ ₹249 ರಿಂದ ₹275ಕ್ಕೆ ಹೆಚ್ಚಿಸಲಾಗಿದೆ. ಕೆಲಸ ಮಾಡಲು ಬಯಸುವ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗುತ್ತದೆ‘ ಎಂದು ತಿಳಿಸಿದರು.

’ನರೇಗಾ ಅನುಷ್ಠಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಅಂತರ್ಜಲ ಚೇತನ ಯೋಜನೆಯಡಿ ನದಿ ಪುನಃಶ್ಚೇತನಕ್ಕಾಗಿ 5,760, ಜಲಾಮೃತ -ಜಲಾನಯನ ಅಭಿವೃದ್ಧಿಯಡಿ 2,129 ಹಾಗೂ ಜಲ ಸಂರಕ್ಷಣೆಯಡಿ 8,090 ಸೇರಿದಂತೆ 15,979 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ‘ ಎಂದರು.

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ’ಜಿಲ್ಲಾಡಳಿತದ ಪರಿಣಾಕಾರಿ ಕ್ರಮಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಗ್ರಹ ಮಾಡಲಾಗುತ್ತಿದೆ. ಇದು ಇದೇ ರೀತಿ ಮುಂದುವರೆಯಬೇಕಾದರೆ ನಾವೆಲ್ಲರೂ ಶಿಸ್ತು ಕಾಪಾಡಿಕೊಳ್ಳಬೇಕು‘ ಎಂದು ತಿಳಿಸಿದರು.

ಸಂಸದ ಬಿ.ಎನ್ ಬಚ್ಚೇಗೌಡ ಮಾತನಾಡಿ, ’ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಅಧಿಕಾರಿಗಳು ಶ್ರಮವಹಿಸುತ್ತಿರುವುದು ಶ್ಲಾಘನೀಯ. ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು‘ ಎಂದು ಹೇಳಿದರು.

ಶಾಸಕ ಜೆ.ಕೆ ಕೃಷ್ಣಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೆ.ಕೆ.ಮಿಥುನ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.