ADVERTISEMENT

ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹ

ದಲಿತ ಸಂಘಟನೆಗಳ ಒಕ್ಕೂಟದಿಂದ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 4:29 IST
Last Updated 8 ಏಪ್ರಿಲ್ 2021, 4:29 IST
ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು
ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು   

ಶಿಡ್ಲಘಟ್ಟ: ‘30 ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ಮಾಡುತ್ತಿದ್ದರೂ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನ ನಿರ್ಮಿಸದೇ ಇರುವುದು ಕ್ಷೇತ್ರದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ’ ಎಂದು ದಲಿತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಈಧರೆ ಪ್ರಕಾಶ್ ಹೇಳಿದರು.

ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಕೆಲ ಕಾಲ ಪ್ರತಿಭಟನೆ ನಡೆಸಿ ತ್ವರಿತವಾಗಿ ಅಂಬೇಡ್ಕರ್ ಭವನಕ್ಕೆ ಸ್ಥಳ ಗುರುತಿಸುವುದು ಸೇರಿದಂತೆ ಅಂಬೇಡ್ಕರ್ ಜಯಂತಿಗೆ ಮೊದಲು ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

‘ಶಾಸಕರು ಸೇರಿದಂತೆ ಸಂಸದರ ಬಳಿ ಹಲವಾರು ಬಾರಿ ಈ ಬಗ್ಗೆ ಚರ್ಚೆ ಮಾಡಿದಾಗ ಅಧಿಕಾರಿಗಳಿಗೆ ಆ ತಕ್ಷಣಕ್ಕೆ ಸ್ಥಳ ಗುರುತಿಸುವಂತೆ ಸೂಚನೆ ನೀಡುತ್ತಾರಾದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದರು.

ADVERTISEMENT

‘ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿನ ಖಾಲಿ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳ ಗುರುತಿಸಲು ಈ ಹಿಂದೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ ಏ.8ರ ಗುರುವಾರದಿಂದ ದಲಿತ ಸಂಘಟನೆಗಳ ಒಕ್ಕೂಟದಿಂದ ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಮಾಡಲು ತೀರ್ಮಾನಿಸಲಾಗಿದೆ’ ಎಂದರು.

‘ಮುಂಬರುವ ಅಂಬೇಡ್ಕರ್ ಜಯಂತಿಗೆ ಮೊದಲು ಅಂಬೇಡ್ಕರ್ ಭವನಕ್ಕೆ ಸ್ಥಳ ಮಂಜೂರು ಮಾಡುವುದು ಸೇರಿದಂತೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆ ನೆರವೇರಿಸಬೇಕು. ಇಲ್ಲವಾದಲ್ಲಿ ಈ ಬಾರಿಯ ಅಂಬೇಡ್ಕರ್ ಜಯಂತಿ ಆಚರಿಸುವ ಅಗತ್ಯವಿ’ ಎಂದು ಎಚ್ಚರಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ರಿಗೆ ಮನವಿ ಪತ್ರ ಸಲ್ಲಿಸಿದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ‘ಈಗಾಗಲೇ ಉಪವಿಭಾಗಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಯವರಿಗೆ ಸ್ಥಳ ಮಂಜೂರು ಮಾಡಲು ಪ್ರಸ್ತಾವನೆ ಕಳುಹಿಸಲಾಗಿದೆ. ಮತ್ತೊಮ್ಮೆ ತಾವು ನೀಡಿರುವ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿ ಅಗತ್ಯ ಕ್ರಮ ಜರುಗಿಸಲಾಗುತ್ತದೆ’ ಎಂದು ಭರವಸೆ ನೀಡಿದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಕೆ.ಎಸ್ ದ್ಯಾವಕೃಷ್ಣಪ್ಪ, ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಕೆ.ಎನ್.ಮುನೀಂದ್ರ, ತಾತಹಳ್ಳಿ ಚಲಪತಿ, ದೇವರಮಳ್ಳೂರು ಕೃಷ್ಣಪ್ಪ, ಜೆ.ವೆಂಕಟಾಪುರ ವಿಜಯಕುಮಾರ, ಭಕ್ತರಹಳ್ಳಿ ಪ್ರತೀಶ್, ಬೈಯಪ್ಪನಹಳ್ಳಿ ಗುರುಮೂರ್ತಿ, ಡಿ.ಸಿ.ನರಸಿಂಹಮೂರ್ತಿ, ಮುನಿಕೃಷ್ಣ, ಶಂಕರ, ಮೂರ್ತಿ, ಕನ್ನಪನಹಳ್ಳಿ ರಾಮಾಂಜಿನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.