ಚಿಂತಾಮಣಿ: ರಸ್ತೆ ಅಪಘಾತಗಳನ್ನು ತಡೆಗಟ್ಟಲು ಚಾಲನೆಯ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ಹೇಳಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ನಗರದ ಜೆಎಂಎಫ್ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ‘ಜನಸಾಮಾನ್ಯರಿಗಾಗಿ ಕಾನೂನು ಅರಿವು-ನೆರವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಾಲಕರು ವಾಹನವನ್ನು ರಸ್ತೆಗೆ ಇಳಿಸಬೇಕಾದರೆ ಚಾಲನಾ ಪರವಾನಗಿ, ವಾಹನದ ವಿಮೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ರಸ್ತೆ ನಿಯಮಗಳನ್ನು ಪಾಲಿಸುವುದರ ಜತೆಗೆ ಇತರರೂ ಪಾಲಿಸುವಂತೆ ನೋಡಿಕೊಳ್ಳಬೇಕು. ಚಾಲಕರು ಸುರಕ್ಷಿತವಾಗಿರಬೇಕು. ಇತರರೂ ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನಗರ ಠಾಣೆಯ ಇನ್ಸ್ಪೆಕ್ಟರ್ ರಂಗಸ್ವಾಮಯ್ಯ ಮಾತನಾಡಿ, ಚಾಲಕರು ಅದರಲ್ಲೂ ವಿಶೇಷವಾಗಿ ಆಟೊ ಚಾಲಕರಿಗೆ ತೊಂದರೆಯಾಗಬಾರದು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ, ಪೊಲೀಸ್ ಹಾಗೂ ಸಾರಿಗೆ ಇಲಾಖೆ ಸೇರಿ ಪರವಾನಗಿ ಇಲ್ಲದವರಿಗೆ ಪರವಾನಗಿ ಮಾಡಿಸಿಕೊಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ಪ್ರಾದೇಶಿಕ ಸಾರಿಗೆ ಇಲಾಖೆಯ ರವಿಶಂಕರ್, ವಕೀಲರ ಸಂಘದ ಉಪಾಧ್ಯಕ್ಷ ಜಿ. ಶಿವಾನಂದ ಹಾಗೂ ಪದಾಧಿಕಾರಿಗಳುಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.