ADVERTISEMENT

ನರೇಗಾ ಕೂಲಿ ಹಣ ನೀಡಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 1:26 IST
Last Updated 12 ಸೆಪ್ಟೆಂಬರ್ 2020, 1:26 IST
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಒ ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಕೃಷಿ ಕೂಲಿಕಾರರ ಸಂಘಟನೆಯ ಪದಾಧಿಕಾರಿಗಳ ಸಭೆ ನಡೆಯಿತು
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಒ ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಕೃಷಿ ಕೂಲಿಕಾರರ ಸಂಘಟನೆಯ ಪದಾಧಿಕಾರಿಗಳ ಸಭೆ ನಡೆಯಿತು   

ಬಾಗೇಪಲ್ಲಿ: ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಿಂದ ಬಾಕಿ ಇರುವ ನರೇಗಾ ಕೂಲಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಆಶಾ, ಬಿಸಿಯೂಟ ನೌಕರರಿಗೆ ಸಮರ್ಪಕವಾಗಿ ವೇತನ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ, ಕೂಲಿಕಾರರ ಸಂಘ ಹಾಗೂ ಸಿಪಿಎಂ ಮುಖಂಡರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಅವರಿಗೆ ಒತ್ತಾಯಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ. 5ರಂದು ಕೃಷಿ ಕೂಲಿ ಕಾರ್ಮಿಕರು ಪ್ರತಿಭಟನೆ ಮಾಡಿದ್ದರು. ಆದ್ದರಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖಂಡರ ಜೊತೆ ತಾ.ಪಂ. ಇಒ ಸಭೆ ನಡೆಸಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಕೂಲಿಕಾರ್ಮಿಕರು ನರೇಗಾ ಅಡಿ ಕೆಲಸ ಮಾಡಿದ್ದಾರೆ. ಬಾಕಿ ಹಣ ನೀಡಿಲ್ಲ. ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೂಲಿಕಾರರು, ಮೇಟಿಗಳು ತೊಂದರೆ ಪಡುತ್ತಿದ್ದಾರೆ. ಆದರೆ, ಇದುವರೆಗೂ ಬಿಲ್ ಮಾಡಿಲ್ಲ ಎಂದು ದೂರಿದರು.

ADVERTISEMENT

ತಾ.ಪಂ. ಇಒ ಮಂಜುನಾಥಸ್ವಾಮಿ ಮಾತನಾಡಿ, ಕೃಷಿ ಕೂಲಿಕಾರ್ಮಿಕರ ಮುಖಂಡರು ನರೇಗಾ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಪಿಡಿಒಗಳ ಸಭೆ ಕರೆದು, ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸಲಾ ಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ, ನರೇಗಾ ತಾಲ್ಲೂಕು ಅಧಿಕಾರಿ ನಾರಾಯಣ, ಕೃಷಿ ಕೂಲಿಕಾರರ ಸಂಘಟನೆಯ ಮುಖಂಡ ರಾದ ಸಾವಿತ್ರಮ್ಮ, ಮಹಮದ್ ಅಕ್ರಂ, ಎಂ.ಎನ್.ರಘುರಾಮರೆಡ್ಡಿ, ಅಶ್ವತ್ಥಪ್ಪ, ಜಿಮುಸ್ತಾಫ, ನಾಗರಾಜ್, ರಾಮಪ್ಪ, ಸೋಮ ಶೇಖರರೆಡ್ಡಿ, ಫಾತೀಮಾಭೀ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.