ಗೌರಿಬಿದನೂರು: ತಾಲ್ಲೂಕಿನ ನಗರಗೆರೆ ಹೋಬಳಿಯ ಸಬ್ಬನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲೆಯ ಹಳೆ ವಿದ್ಯಾರ್ಥಿಗಳಾದ ನವ್ಯ ಮತ್ತು ನವೀನ್ ಕುಮಾರ್ ಅವರು ಗುರುವಾರ ಮಧ್ಯಾಹ್ನದ ಬಿಸಿಯೂಟಕ್ಕೆ ನೆರವಾಗುವ ನಿಟ್ಟಿನಲ್ಲಿ ತಟ್ಟೆ ಮತ್ತು ಲೋಟಗಳನ್ನು ವಿತರಣೆ ಮಾಡಿದ್ದಾರೆ.
ಈ ವೇಳೆ ಎಸ್ಡಿಎಂಸಿ ಅಧ್ಯಕ್ಷ ಗಂಗಾಧರಪ್ಪ ಮಾತನಾಡಿ, ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಉನ್ನತ ಸ್ಥಾನದಲ್ಲಿರುವ ಇವರು ಸರ್ಕಾರಿ ಶಾಲೆಯಲ್ಲಿನ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಹಿಂದೆ ಇವರು ಮಕ್ಕಳಿಗೆ ಗುಣಮಟ್ಟದ ಕಲಿಕೋಪಕರಣಗಳನ್ನು ನೀಡಿದ್ದಾರೆ. ಇವರು ನಮ್ಮ ಶಾಲೆಯ ಮೇಲೆ ಅಭಿಮಾನವನ್ನಿಟ್ಟು ಮಕ್ಕಳಿಗೆ ತಟ್ಟೆ ಮತ್ತು ಲೋಟಗಳನ್ನು ವಿತರಿಸಿದ್ದಾರೆ ಎಂದು ಹೇಳಿದರು.
ಹಳೆ ವಿದ್ಯಾರ್ಥಿನಿ ನವ್ಯ ಮಾತನಾಡಿ, ಸರ್ಕಾರಿ ಶಾಲೆಯಲ್ಲಿನ ಮಕ್ಕಳು ಚೆನ್ನಾಗಿ ಓದಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬೆಳೆದು ಮುಂದೆ ಇದೇ ರೀತಿ ಬೇರೆಯವರಿಗೆ ಸಹಾಯ ಮಾಡುವ ಹಂತಕ್ಕೆ ತಲುಪಲಿ ಎಂಬುದೇ ನಮ್ಮ ಆಶಯವಾಗಿದೆ. ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಡಲಿವೆ ಎಂದು ಹೇಳಿದರು.
ಈ ವೇಳೆ ಮುಖ್ಯ ಶಿಕ್ಷಕ ಜಿ.ಉಮೇಶ ಮತ್ತು ಸಹ ಶಿಕ್ಷಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.