ಶಿಡ್ಲಘಟ್ಟ: ನಗರದ ಆಗ್ನೇಯ ದಿಕ್ಕಿನಲ್ಲಿರುವ ಇತಿಹಾಸ ಪ್ರಸಿದ್ಧ ‘ಗೌಡನ ಕೆರೆ’ ಅಂಗಳ ಜಾಲಿಗಿಡಗಳಿಂದ ತುಂಬಿದೆ. ಕೆರೆ ಒಳಗೆ ಮನುಷ್ಯರಿರಲಿ ಜಾನುವಾರುಗಳು ಸಹ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒತ್ತುವರಿಗೆ ಈಡಾಗಿ ತನ್ನ ವಿಸ್ತೀರ್ಣವನ್ನು ಕಳೆದುಕೊಳ್ಳುತ್ತಿದೆ.
480 ವರ್ಷಗಳ ಇತಿಹಾಸವಿರುವ ಕೆರೆಯ ಅಸ್ಥಿತ್ವವನ್ನೇ ಅಣಕ ಮಾಡುವಂತಾಗಿದೆ. ಇದೇನು ಕೆರೆಯೋ ಅಥವಾ ಜಾಲಿ ಗಿಡಗಳ ವನವೋ ಎಂಬ ಅನುಮಾನ ಮೂಡುವಂತಾಗಿದೆ.
ಕೆರೆ ಸಣ್ಣ ನೀರಾವರಿ ಇಲಾಖೆಯಿಂದ ಡೀಮ್ಡ್ ಅರಣ್ಯಕ್ಕೆ ಸೇರಿದೆ. ಆದರೆ, ಅರಣ್ಯ ಇಲಾಖೆಯವರು ಒತ್ತುವರಿ ತೆರವಿಗೂ ಮುಂದಾಗದೆ, ಜಾಲಿ ಮರಗಳನ್ನೂ ತೆಗೆಯದೆ ಇರುವುದರಿಂದ ಕೆರೆ ನಿರುಪಯುಕ್ತವಾಗಿದೆ.
ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಗೌಡನ ಕೆರೆ ಸುಮಾರು 99 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. ಸುತ್ತಮುತ್ತ ನೂರಾರು ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಅವಕಾಶವಿದೆ. ಈ ಕೆರೆಯಲ್ಲಿ ನೀರು ಸಂಗ್ರಹಗೊಂಡರೆ ನಗರಕ್ಕೆ ನೀರು ಸರಬರಾಜು
ಮಾಡುವ ಹಲವಾರು ಕೊಳವೆ ಬಾವಿಗಳು ಹಾಗೂ ಸುತ್ತಲಿನ ಗ್ರಾಮಗಳ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ. ಆದರೆ, ದಶಕಗಳಿಂದಲೂ ಮಳೆ ಕೊರತೆಯಿಂದ ಕೆರೆಗೆ ನೀರು ಬಾರದೆ ಯಥೇಚ್ಛವಾಗಿ ಜಾಲಿಗಿಡಗಳು ಬೆಳೆದಿವೆ. ಕಾಲಕಾಲಕ್ಕೆ ಇವುಗಳನ್ನು ತೆರವು ಮಾಡದ ಪರಿಣಾಮ ಇಡೀ ಕೆರೆಯನ್ನೇ ಜಾಲಿ ಗಿಡಗಳು
ಆಕ್ರಮಿಸಿವೆ.
ಪ್ರತಿ ವರ್ಷ ಬೀಳುವ ಅಲ್ಪಸ್ವಲ್ಪ ಮಳೆಗೆ ಕೆರೆಯ ಕೆಲ ಗುಂಡಿಗಳಿಗೆ ನೀರು ತುಂಬುತ್ತದೆ. ಆದರೆ ಜಾಲಿ ಮರಗಳು ಪೊದೆಗಳಂತೆ ಇರುವುದರಿಂದ ಜಾನುವಾರುಗಳು ಕೆರೆಗೆ ಹೋಗಿ ನೀರು ಕುಡಿಯಲಾಗದ ಸ್ಥಿತಿ ಇದೆ. ಅಪ್ಪಿತಪ್ಪಿ ಜಾನುವಾರುಗಳು ಕೆರೆಗೆ ಇಳಿದರೆ ವಾಪಸ್ ಬರುತ್ತವೆ ಎನ್ನುವ ನಂಬಿಕೆ ಇಲ್ಲದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.