ಚಿಕ್ಕಬಳ್ಳಾಪುರ: ರೈತರು ಹೊಸದಾಗಿ ಕೊರೆಯಿಸಿದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲು ಅಂತರ್ಜಲ ಪ್ರಮಾಣಪತ್ರ ಕಡ್ಡಾಯಗೊಳಿಸಿದ್ದನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ರೈತಸಂಘ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ‘ರೈತರು ತಮ್ಮ ಜಮೀನುಗಳಲ್ಲಿ ಹೊಸದಾಗಿ ಕೊರೆಯಿಸಿದ ಕೊಳವೆ ಬಾವಿಗಳನ್ನು ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಅಂತರ್ಜಲ ಪ್ರಮಾಣ ಪತ್ರ ಕೇಳುತ್ತಿದ್ದಾರೆ. ಇದರಿಂದ ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದರು.
‘ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ ಎಂದು ಕಳೆದ ಎರಡು ತಿಂಗಳುಗಳ ಹಿಂದೆ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಪ್ರಮಾಣ ಪತ್ರ ಬೇಕು ಎಂದು ಹೇಳುತ್ತಿದ್ದಾರೆ. ಪ್ರಮಾಣಪತ್ರ ಪಡೆಯಬೇಕಾದರೆ ಒಂದು ತಿಂಗಳ ಬೇಕಾಗುತ್ತದೆ. ಪ್ರಮಾಣಪತ್ರ ಇಲ್ಲದಿದ್ದರೆ ₹5 ಸಾವಿರ ದಂಡ ಕಟ್ಟಬೇಕಾಗುತ್ತದೆ’ ಎಂದು ತಿಳಿಸಿದರು. ರೈತ ಮುಖಂಡರಾದ ಮಂಜುನಾಥ್, ನರಸಿಂಹಪ್ಪ, ಸೂರಪ್ಪ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.