ಬೆಂಗಳೂರು: ‘ರಾಜ್ಯದ ಪ್ರತಿ ನಾಗರಿಕನ ಆರೋಗ್ಯ ದತ್ತಾಂಶ (ಹೆಲ್ತ್ ರಿಜಿಸ್ಟರ್) ಸಿದ್ಧಪಡಿಸುವ ಮಹತ್ವಾಕಾಂಕ್ಷೆ ಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸ್ವಯಂ ಕ್ವಾರಂಟೈನ್ನಲ್ಲಿರುವ ಸಚಿವರು, ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಈ ವಿಷಯ ತಿಳಿಸಿದರು.
‘ಕೋವಿಡ್-19 ನಮಗೆ ಸಾಕಷ್ಟು ಅನುಭವ ನೀಡಿದೆ. ಹೀಗಾಗಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ವಿಶೇಷ ಒತ್ತು ನೀಡುವ ದೃಷ್ಟಿಯಿಂದ ಪ್ರತಿ ಮನೆ ಮತ್ತು ಎಲ್ಲ ಕುಟುಂಬ ಸದಸ್ಯರ ಆರೋಗ್ಯ ಮಾಹಿತಿ ಸಂಗ್ರಹಿಸಲು ನಿರ್ಧರಿಸಲಾಗಿದೆ. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಆರೋಗ್ಯ, ಕಂದಾಯ, ಶಿಕ್ಷಣ, ಮತ್ತು ಸ್ಥಳೀಯ ಸಂಸ್ಥೆ ಸಿಬ್ಬಂದಿ ಜತೆ ಆಶಾ ಕಾರ್ಯಕರ್ತೆಯರ ತಂಡ ರಚಿಸಿ ಪ್ರತಿ ಮನೆಗೂ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುವುದು’ ಎಂದರು.
‘ಸಮೀಕ್ಷೆಯಲ್ಲಿ ಸಂಗ್ರಹಿಸಬೇಕಿರುವ ಮಾಹಿತಿ, ಸಮೀಕ್ಷೆ ಸ್ವರೂಪ ಮತ್ತು ಕಾರ್ಯವಿಧಾನಗಳ ಕರಡು ಸಿದ್ಧಪಡಿಸಲು
ಸೂಚನೆ ನೀಡಲಾಗಿದೆ. ಕರಡು ಸಿದ್ಧವಾದ ಬಳಿಕ ತಜ್ಞರ ಜತೆ ಸಮಾಲೋಚಿಸಿ ಅಂತಿಮಗೊಳಿಸಲಾಗುವುದು. ಮುಂದುವರಿದ ರಾಷ್ಟ್ರಗಳಲ್ಲಿ ಇದೇ ವಿಧಾನ ಅಳವಡಿಸಿಕೊಂಡು ಆರೋಗ್ಯ ಸೇವೆ ನೀಡಲಾಗುತ್ತಿದೆ. ಯೋಜನೆಗಳನ್ನು ಸಿದ್ಧಪಡಿಸುವ ಮತ್ತು ಅನುಷ್ಠಾನಗೊಳಿಸಲು ಇದು ನೆರವಾಗಲಿದೆ. ಪಿಎಚ್ಸಿ ವ್ಯಾಪ್ತಿಯಲ್ಲಿ ಈ ಸಮೀಕ್ಷಾ ಕಾರ್ಯವು ನಿಯಮಿತವಾಗಿ ನಡೆಯುತ್ತಿರುತ್ತದೆ. ಇದರಿಂದ ಪ್ರತಿ ವ್ಯಕ್ತಿಯ ನಿಖರ ದತ್ತಾಂಶ ಲಭ್ಯವಿರುತ್ತದೆ’ ಎಂದು ಸಚಿವರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.